ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಾವೇರಿ ಕಣಿವೆಯಲ್ಲಿನ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇಂದು-ನಿನ್ನೆಯದಲ್ಲ. ಹಲವಾರು ವರ್ಷಗಳ ಹಿಂದೆ ಈ ಯೋಜನೆ ಸಿದ್ಧವಾಗಿದೆ. ಇದು ವಿದ್ಯುಚ್ಛಕ್ತಿ, ಕುಡಿಯುವ ನೀರು ಮತ್ತು ಸಂಕಷ್ಟದ ವರ್ಷಗಳಲ್ಲಿ ಉಭಯ ರಾಜ್ಯಗಳ ನಡುವೆ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಅನುಕೂಲವಾಗುವ ಯೋಜನೆಯಾಗಿದೆ. ಉಭಯ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಯನ್ನು ಜಾರಿ ಮಾಡಲು ನಾವು ಪ್ರಯತ್ನಿಸಿದ್ದರೆ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ರಾಜ್ಯದ ಕಾವೇರಿ ಕಣಿವೆಯ ರೈತರ ಹಕ್ಕಿನ ಸಲುವಾಗಿ ನಾವು ಕಾನೂನು ಹೋರಾಟವನ್ನು ಸದಾಕಾಲ ಮಾಡುತ್ತಲೇ ಬಂದಿದ್ದೇವೆ. ನಮ್ಮ ಹಕ್ಕಿನ ಸಲುವಾಗಿ ಈಗಲೂ ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಮಗೆ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂಬ ಭರವಸೆಯ ಮಾತುಗಳನ್ನು ಅವರು ಆಡಿದರು.
ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಕೇಂದ್ರ ಸರ್ಕಾರದಿಂದ ಬೇಕಾಗುವ ಎಲ್ಲಾ ಕ್ಲಿಯರೆನ್ಸ್ ಗಳನ್ನು ಪಡೆಯುತ್ತೇವೆ ಎಂದು ಅವರು ಹೇಳಿದರು.

ಕೇರಳ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಗಳ ಬಳಕೆ ಮೇಲೆ ಕಣ್ಣು ಇಟ್ಟಿದ್ದೇವೆ. ನಿರಂತರವಾಗಿ ನಿಗಾ ಇರಿಸಿದ್ದೇವೆ. ಕೆಲ ಪ್ರದೇಶಗಳಲ್ಲಿ ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ರೇಡಗಳನ್ನು ಮಾಡಿದ್ದೇವೆ. ಅಕ್ರಮ ಅರಣ್ಯ ಸಂಪತ್ತು ಸಾಗಾಟವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ. ತಮಿಳುನಾಡು ಮುಖ್ಯಮಂತ್ರಿಗಳು ಬರೆದಿರುವ ಪತ್ರದ ಭಾಷೆ ಮತ್ತು ವೈಖರಿ ಸರಿಯಾದ ರೀತಿಯಲ್ಲಿ ಇಲ್ಲ. ರಾಷ್ಟ್ರ ಹಿತದೃಷ್ಟಿಯಿಂದ ಆ ಪತ್ರ ಇಲ್ಲ.
ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















