ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಹಾಗೂ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವುದನ್ನು ಖಂಡಿಸಿ ಇಂದು ನಗರಸಭಾ ಸದಸ್ಯ ಬಿ.ಕೆ. ಮೋಹನ್ ನೇತೃತ್ವದಲ್ಲಿ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಜನಸಾಮಾನ್ಯರ ಜನಜೀವನ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರವು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹಾಗೂ ವ್ಯಾಕ್ಸಿನ್ ಲಸಿಕೆ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದಿಂದ ಉಚಿತ ವ್ಯಾಕ್ಸಿನ್ ಲಸಿಕೆ ನೀಡಲಾಗದೇ ಹಣಕ್ಕಾಗಿ ಖಾಸಗಿ ಆಸ್ಪತ್ರೆಗಳಲ್ಲಿ 800-1000ರೂ.ಗಳಲ್ಲಿ ಮಾರಾಟವಾಗುತ್ತಿದ್ದು, ಉಳ್ಳವರ ಪರ ಸರ್ಕಾರವಾಗಿದೆ. ಬಡತನ ನಿರ್ಮೂಲನೆ ಮಾಡಬೇಕಾದ ಆಡಳಿತ ಪಕ್ಷವಾದ ಬಿಜೆಪಿ ಬಡವರ ಬದುಕನ್ನೇ ನಿರ್ಮೂಲನೆ ಮಾಡಲು ಹೊರಟಂತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಲ್. ಚಂದ್ರೇಗೌಡ ಮಾತನಾಡಿ, ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷವಾಗಿದೆ. ಕಾಂಗ್ರೆಸ್ ನೀಡಿದ ಕೊಡುಗೆಗಳನ್ನು ಖಾಸಗೀಕರಣಗೊಳಿಸಿ ದೇಶದ ಆಸ್ತಿಯನ್ನು ಖಾಸಗಿ ಒಡೆತನದ ಆಸ್ತಿಗಳನ್ನಾಗಿ ಮಾಡುವ ಮೂಲಕ ದೇಶದ ಆರ್ಥ ವ್ಯವಸ್ಥೆಯನ್ನು ಸಂಪೂರ್ಣ ಹಾಳುಗೆಡವಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ನ ಹಿರಿಯ ಮುಖಂಡ ಗೋವಿಂದ ಸ್ವಾಮಿ ಮಾತನಾಡಿ, ಬಿಜೆಪಿ ಪಕ್ಷದ ನಾಯಕರು ಆಸ್ತಿ ಮಾಡುವ ಕಾಯಕದಲ್ಲಿ ತಲ್ಲೀನರಾಗಿರುವಷ್ಟು ಬಡವರ ಏಳಿಗೆಗಾಗಿ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಕಡಿಮೆಗೊಳಿಸುವ ವಿಚಾರದಲ್ಲಿ ಆಸಕ್ತಿ ಇಲ್ಲದಂತಾಗಿರುವುದು ಶೋಚನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಲೋಪದೋಷಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಹೇಳಿದರು.
ಬಿಜೆಪಿ ಸರ್ಕಾರದ ಹಲವು ಜನವಿರೋಧಿ ನೀತಿಗಳನ್ನು ಖಂಡಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ತಾಲೂಕಿನ ಯುವ ಮುಖಂಡ ಗಣೇಶ್, .ಬಿ.ಎಮ್. ರವಿಕುಮಾರ್, ನಗರಸಭಾ ಸದಸ್ಯರಾದ ಸುದೀಪ್ ಕುಮಾರ್, ಮಣಿ, ಕಾಂತರಾಜ್, ಜಾರ್ಜ್, ಬಷೀರ್ ಅಹಮ್ಮದ್, ಬಿ.ಟಿ.ನಾಗರಾಜ್, ಮಂಜುನಾಥ್(ಟೀಕು), ರಿಯಾಜ್ ಅಹಮ್ಮದ್, ಚನ್ನಪ್ಪ, ಶೃತಿ ವಸಂತಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಐಸಾಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜುಳಾ, ಪದಾಧಿಕಾರಿಗಳಾದ ಗೀತಾ, ವರಲಕ್ಷ್ಮೀ, ಯೂತ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಅಫ಼್ತಾಬ್, ತಾಲ್ಲೂಕು ಕಾಂಗ್ರೆಸ್ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post