ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸರಕು ಸಾಗಾಣಿಕೆ ವಾಹನಗಳಲ್ಲಿ ಕೃಷಿ ಪರಿಕರಗಳನ್ನಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಂಶಯಾಸ್ಪದ ಸಾಗಾಣಿಕೆ ಹಾಗೂ ಕಸಾಯಿಖಾನೆಗೆ ಕೊಂಡೊಯ್ಯುವುದು ತಿಳಿದುಬಂದಲ್ಲಿ ಅಂತಹ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ 5-7ವರ್ಷಗಳ ಸೆರೆವಾಸ ಹಾಗೂ 10ಲಕ್ಷ ರೂ.ಗಳವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇರುವುದಾಗಿ ಅವರು ತಿಳಿಸಿದ ಅವರು, ವಶಕ್ಕೆ ಪಡೆಯಲಾದ ಜಾನುವಾರುಗಳನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದರು.
ಈ ಕಾಯ್ದೆಯ ಕರಾರುವಾಕ್ಕು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಚೆಕ್ಪೋಸ್ಟ್ಗಳ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಣಿಕೆ ವಾಹನಗಳ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಅಧಿಕಾರ ಹೊಂದಿರಲಿದೆ. ಅನುಮತಿ ರಹಿತವಾಗಿ ಜಾನುವಾರಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾವುದೇ ಮೂಲದಿಂದ ಅಕ್ರಮ ಜಾನುವಾರು ಸಾಗಾಣಿಕೆ ನಡೆದದ್ದು ಕಂಡುಬಂದಲ್ಲಿ ಸಂಬಂಧಿತ ತಾಲೂಕುಗಳ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಪಶು ಇಲಾಖೆಯ ವೈದ್ಯಕೀಯ ಸಿಬ್ಬಂಧಿಗಳು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ಹಾಗೂ ನಿರ್ಲಕ್ಷ್ಯ ವಹಿಸದೆ ತಮ್ಮ ಜವಾಬ್ದಾರಿಯರಿತು ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ರಕ್ಷಣಾ ಇಲಾಖೆಯ ಸಹಕಾರ ಪಡೆಯುವಂತೆ ಸೂಚಿಸಿದ ಅವರು, ಮುಂಬರುವ ಬಕ್ರೀದ್ ಹಬ್ಬದ ದಿನದಂದು ಕಡ್ಡಾಯವಾಗಿ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ 9ಗೋಶಾಲೆಗಳ ಚಟುವಟಿಕೆಗಳಿಗೆ 130ಲಕ್ಷ ರೂ.ಗಳ ಬೇಡಿಕೆ ಇದ್ದು, ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದರು.
ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಯಲಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳು, ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post