ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿ ನೀಡಿದೆ.
ಮುಕ್ತ ಹಾಗೂ ದೂರ ಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 2021-22ನೇ ಸಾಲಿಗೆ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕಾ ವಿಧಾನದಡಿ ಎಂಬಿಎ ಕೋರ್ಸ್ಗೆ(ಜನರಲ್ ಅಡ್ಮಿನಿಸ್ಟ್ರೇಷನ್) 10,000 ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿಸಿದೆ.

ಕುಲಪತಿಗಳ ಸಂತಸ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿರುವ ಕುಲಪತಿಗಳು ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇ ಯಿಂದ ಮಾನ್ಯತೆ ಪಡೆದ ದೇಶದ ಮೊದಲ ವಿಶ್ವವಿದ್ಯಾನಿಲಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಎಂದು ಸಂತಸವನ್ನು ಹಂಚಿಕೊಂಡಿದ್ದಾರೆ ಎಂದು ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















