ಕಲ್ಪ ಮೀಡಿಯಾ ಹೌಸ್
ಮಂಗಳೂರು: ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರಿಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರಿಗೆ ಮೆದುಳಿನ ರಕ್ತನಾಳದ ಶಸ್ತ್ರಚಿಕಿತ್ಸೆಯನ್ನು ತಜ್ಞ ವೈದ್ಯರಾದ ಡಾ. ದಿವಾಕರ್ ರಾವ್ ಹಾಗೂ ಡಾ. ಸುನೀಲ್ ಶೆಟ್ಟಿ ನೇತೃತ್ವದ ತಂಡ ಸೋಮವಾರ ತಡರಾತ್ರಿ ಹೆಪ್ಪುಗಟ್ಟಿದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ವೈದ್ಯರ ಪರಿಶ್ರಮದಿಂದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಶೀಘ್ರವೇ ಪ್ರಜ್ಞೆ ಮರಳುವ ನಿರೀಕ್ಷೆಯಿದೆ ಎಂದು ವೈದ್ಯರು ಹೇಳಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ತಲೆಯ ಒಳಭಾಗದಲ್ಲಿ ಗಾಯವಾಗಿತ್ತು. ಕಳೆದ ಒಂದು ವಾರದಿಂದ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಜ್ಞಾ ಹೀನ ಸ್ಥಿತಿಗೆ ತಲುಪಿದ್ದ ಅವರು ತೀವ್ರ ನಿಗಾ ಘಟಕದಲ್ಲಿದ್ದರು.
ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕರು ಮಂಗಳೂರಿಗೆ ಭೇಟಿ ನೀಡಿ ಆಸ್ಕರ್ ಆರೋಗ್ಯ ಸ್ಥಿತಿ ವಿಚಾರಿಸಿದ್ದರು.
ಫಲಿಸಿತು ಧರ್ಮಸ್ಥಳ ಮಂಜುನಾಥೇಶ್ವರನ ದಿವ್ಯ ಪ್ರಸಾದ..!
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಹ ಆಸ್ಪತ್ರೆಗೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ಮೂಲ ಗಂಧ ಪ್ರಸಾದವನ್ನು ಆಸ್ಕರ್ ಅವರ ಹಣೆಗೆ ಹಾಕಿ ಶೀಘ್ರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ್ದರು.
ಈಗ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್. ಕರ್ನಾಟಕ ಕಿಸಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಮಂಗಳೂರಿಗೆ ಆಗಮಿಸಿ, ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ್ದರು . ಆದರೆ ರಾತ್ರಿ ಆಸ್ಕರ್ ಫರ್ನಾಂಡಿಸ್ ಆರೋಗ್ಯದ ಬಗ್ಗೆ ಸುಳ್ಳುಸುದ್ದಿ ಹರಿದಾಡಲು ಆರಂಭವಾಗಿತ್ತು. ಈ ಸುದ್ದಿ ಸುಳ್ಳೆಂದು ಸಚಿನ್ ಮೀಗಾ ಸ್ಪಷ್ಟನೆ ನೀಡಿದ್ದರು.
ಬಳಿಕ ಡಿಸಿಪಿ ಹರಿರಾಂ ಶಂಕರ್ ಈ ಸುದ್ದಿಗಳ ಕುರಿತು ಸ್ಪಷ್ಟನೆ ನೀಡಿದ್ದರು. “ಆಸ್ಕರ್ ಫರ್ನಾಂಡೀಸ್ ಆರೋಗ್ಯದ ಬಗ್ಗೆ ಸುಳ್ಳು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆಸ್ಕರ್ ಫರ್ನಾಂಡೀಸ್ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಳ್ಳು ಸುದ್ದಿಗೆ ಕಿವಿಗೊಡಬಾರದು” ಎಂದು ಮನವಿ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post