ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಶುಕ್ರವಾರ ತವರು ಕ್ಷೇತ್ರ ಶಿವಮೊಗ್ಗಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ಚೌತಿಯ ಬಳಿಕ ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೆ ಪ್ರವಾಸ ನಡೆಸುತ್ತೇನೆ. ಪಕ್ಷವನ್ನು ಮತ್ತಷ್ಟು ಗಟ್ಟಿಯಾಗಿ ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕನಿಷ್ಠ 140 ಸ್ಥಾನಗಳನ್ನು ಗೆಲುವು ಸಾಧಿಸಬೇಕು. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದೆ ಎಂದು ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಕಾರ್ಯವನ್ನು ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಹಾಗೂ ಮುಖಂಡರ ನೆರವಿನೊಂದಿಗೆ ಮಾಡುತ್ತೇನೆ. ಎರಡನೇ ಹಂತದಲ್ಲಿ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಹೋಗಿ ಸಂಘಟನೆ ಕಾರ್ಯ ನಡೆಸುತ್ತೇನೆ ಎಂದು ಹೇಳಿದರು.
ಹಿಂದಿನಂತೆ ಈಗಲೂ ನನ್ನ ಮನೆ ಬಾಗಿಲು ದಿನದ 24 ಗಂಟೆ ಎಲ್ಲಾ ಕಾರ್ಯಕರ್ತರಿಗಾಗಿ ತೆರೆದಿರುತ್ತದೆ. ಯಾವುದೇ ಸಮಸ್ಯೆ ಇದ್ದರೂ ನಾನು ಬಗೆಹರಿಸಲು ಸಿದ್ದ. ಪಕ್ಷ ಸಂಘಟನೆಯ ತಮ್ಮ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.


ನನ್ನ ಅಧಿಕಾರವಧಿಯಲ್ಲಿ ಶಿವಮೊಗ್ಗಕ್ಕೆ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಶಿವಮೊಗ್ಗಕ್ಕೆ ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿಯ ಕೊಡುಗೆ ನೀಡಿದ್ದೇನೆ. ಜಾತಿ, ಧರ್ಮ, ಪಂತ ಎಂದು ನೋಡದೆ, ಪ್ರತಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕೆಲಸ ಮಾಡಿಕೊಟ್ಟಿದ್ದೇನೆ. ಎಲ್ಲ ಶಾಸಕರಿಗೂ ಸ್ಪರ್ಧಿಸಿದ್ದೇನೆ. ತಮ್ಮ ಕೆಲಸದಲ್ಲಿ ಆತ್ಮತೃಪ್ತಿ ಇದೆ ಎಂದರು.
ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲಿದ್ದು, ಸಧ್ಯದಲ್ಲಿ ವಿಮಾನ ಹಾರಾಟ ನಡೆಸಲಿದೆ. ಆ ಬಳಿಕ ಇಲ್ಲಿ ಕೈಗಾರಿಕೆಗಳು ಹೆಚ್ಚಿನ ರೀತಿಯಲ್ಲಿ ಆರಂಭಗೊಳ್ಳಲಿದೆ. ಉದ್ಯೋಗವಕಾಶಗಳು ಹೆಚ್ಚಲಿದೆ ಎಂದು ಹೇಳಿದರು.


ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ವಿಚಾರದಲ್ಲಿ ಇನ್ನಷ್ಟು ಚರ್ಚೆ ನಡೆಸಿ ಒಂದು ತೀರ್ಮಾನ ಕೈಗೊಳ್ಳಲಾಗುವುದು. ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆಯ ಅಗತ್ಯವಿದೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದರು.
ಮೈಸೂರಿನಲ್ಲಿ ಯುವತಿಯೋರ್ವಳ ಮೇಲೆ ನಡೆದಿರುವ ಅತ್ಯಾಚಾರ ಘಟನೆ ಖಂಡನೀಯ. ಈ ವಿಚಾರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ಅವರು ಯಾವುದೇ ಸಂದರ್ಭದಲ್ಲಿ ಮನಸ್ಸಿನ ತಮ್ಮ ಮನಸಗಸಿನ ನೋವನ್ನು ಹೊರಹಾಕಿದ್ದಾರೆ ಅಷ್ಟೇ ಎಂದರು.


ಜ್ಞಾನೇಂದ್ರ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಇಲಾಖೆ ಇದನ್ನು ನಿಭಾಯಿಸಲು ಸಮರ್ಥವಾಗಿದೆ. ಒಂದೆರಡು ದಿನದಲ್ಲಿ ಆರೋಪಿಗಳ ಬಂಧನ ವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾನೂನು-ಸುವ್ಯವಸ್ಥೆ ಅಚ್ಚುಕಟ್ಟಾಗಿ ಸಾಗಿತ್ತಿದೆ ಎಂದು ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















