ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.7ರಂದು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ಹೊರಡಿಸಿರುವ ಹಿನ್ನೆಲೆ ಕಾರ್ಮಿಕರು ಶುಕ್ರವಾರದಿಂದ ಕರ್ತವ್ಯಕ್ಕೆ ಹಾಜರಾಗದಂತೆ ಮುಖ್ಯ ಆಡಳಿತಾಧಿಕಾರಿ ಸೂಚಿಸಿದ್ದಾರೆ.
ಕಾರ್ಖಾನೆಯಲ್ಲಿ ಕಾರ್ಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಪರಿಣಾಮ ಕಾರ್ಮಿಕರು ಕೊನೆಗೂ ಬೀದಿ ಪಾಲಾಗಿದ್ದಾರೆ. ಪ್ರಸ್ತುತ ಮಾಸ್ಟರ್ ರೋಲ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹಾಜರಾಗದಿರುವಂತೆ ಮುಖ್ಯ ಆಡಳಿತಾಧಿಕಾರಿ ಶ್ರೀನಿವಾಸ್ ಈ ಸಂಬಂಧ ಹೊರಡಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಕಾರ್ಖಾನೆಯಲ್ಲಿ ಅಸ್ತಿತ್ವದಲ್ಲಿರುವ ಎರಡು ಕಾರ್ಮಿಕ ಸಂಘಟನೆಗಳು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.೭ರಂದು ಹೊರಡಿಸಿರುವ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿವೆ. ಈ ನಡುವೆ ಕಂಪನಿ ಕಾರ್ಯದರ್ಶಿ ಈಗಾಗಲೇ ಕಾರ್ಯದರ್ಶಿಗಳ ಆದೇಶವನ್ನು ಪ್ರಶ್ನಿಸದಂತೆ ತಡೆಯಾಜ್ಞೆ ಸಹ ತಂದಿದ್ದಾರೆ.

ಇದೀಗ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದ್ದು, ಕಾರ್ಮಿಕ ಸಂಘಟನೆಗಳಿಗೆ ಹೋರಾಟ ಮಾತ್ರ ಬಾಕಿ ಉಳಿದಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ.
ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ತರಾತುರಿ ನಿರ್ಧಾರಗಳು ಕಾರ್ಮಿಕರು ಹಾಗು ಕುಟುಂಬ ವರ್ಗದವರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















