ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಚಿತ್ರರಂಗಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೊಡುಗೆ ಅಪಾರ. ಈಗ ಅವರ ಪುತ್ರ ಮನು ಕೂಡ “ಮುಗಿಲ್ ಪೇಟೆ” ಚಿತ್ರದ ಮೂಲಕ ಯಶಸ್ಸಿನ ಹೆಜ್ಜೆಯಿಡಲು ಸಜ್ಜಾಗಿದ್ದಾರೆ.
ಮನುರಂಜನ್ ಅಭಿನಯದ “ಮುಗಿಲ್ ಪೇಟೆ” ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ. ನವೆಂಬರ್ 19 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಭರತ್ ಎಸ್. ನಾವುಂದ ಈ ಚಿತ್ರದ ನಿರ್ದೇಶಕರು. ಚಿತ್ರದ ಬಿಡುಗಡೆ ದಿನಾಂಕ ತಿಳಿಸಲು ಶಿವಮೊಗ್ಗದಲ್ಲಿ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ಚಿತ್ರದ ನಾಯಕ ಮನುರಂಜನ್ ಮಾತನಾಡಿ”ಮುಗಿಲ್ ಪೇಟೆ” ಇಡೀ ಚಿತ್ರತಂಡದ ಶ್ರಮದ ಫಲವಾಗಿ ಇಂದು ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ತೊಂಬತ್ತು ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಕುಂದಾಪುರ, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆಸಿದ್ದೇವೆ. ಸಂಬಂಧಗಳಿಗೆ ಬೆಲೆ ಕೊಡುವ ಕುಟುಂಬವೊಂದು. ಸಂಬಂಧಗಳನ್ನು ಕಡೆಗಾಣಿಸುವ ಕುಟುಂಬ ಮತ್ತೊಂದು. ಈ ಎರಡು ಕುಟುಂಬದ ಎರಡು ಜೀವಗಳ ನಡುವೆ ಪ್ರೀತಿ ಮಾಡಿದಾಗ ಏನಾಗುತ್ತದೆ ಎಂಬುದೆ “ಮುಗಿಲ್ ಪೇಟೆ”ಯ ಕಥಾವಸ್ತು. ಇದು ಒಂದು ಜಾನರ್ ನ ಸಿನಿಮಾ ಅಲ್ಲ. ಕೌಟುಂಬಿಕ ಸನ್ನಿವೇಶ, ಪ್ರೀತಿ, ಸಾಹಸ, ಉತ್ತಮ ಹಾಸ್ಯ ಎಲ್ಲವೂ ನಮ್ಮ ಸಿನಿಮಾದಲ್ಲಿದೆ. ಎಲ್ಲರ ಸಹಾಯದಿಂದ ನಮ್ಮ ಚಿತ್ರ ಬಿಡುಗಡೆ ಹಂತ ತಲುಪಿದೆ. ಟ್ರೇಲರ್ ಹಾಗೂ ಹಾಡು ಜನಪ್ರಿಯವಾಗಿದೆ. ಇದನ್ನು ನೋಡಿದವರು ನನ್ನ ಪಾತ್ರ ಮೆಚ್ಚಿಕೊಂಡಿದ್ದಾರೆ. ಚಿತ್ರಕ್ಕೂ ಜನಮನ್ನಣೆ ಸಿಗುವ ಭರವಸೆಯಿದೆ ಎಂದರು.

ಸಾಧುಕೋಕಿಲ, ರಂಗಾಯಣ ರಘು, ತಾರಾ, ಅವಿನಾಶ್ ಅವರಂತಹ ಉತ್ತಮ ಕಲಾವಿದರೊಡನೆ ಅಭಿನಯಿಸಿದ್ದ ಅನುಭವ ನಿಜಕ್ಕೂ ಮರೆಯುವ ಹಾಗಿಲ್ಲ. ನಾಯಕಿ ಕಯಾದು ಅವರ ಅಭಿನಯ ಸೂಪರ್. ಚಿತ್ರದ ತುಣುಕು ಹಾಗೂ ಹಾಡುಗಳನ್ನು ಅಪ್ಪನಿಗೆ ತೋರಿಸಿದೆ. ಇಷ್ಟಪಟ್ಟರು. ಅವರ ಆಶೀರ್ವಾದ ಸದಾ ಇರುತ್ತದೆ ಎಂದು ಹೇಳಿದರು.
ವಿಶೇಷವಾಗಿ ಮೊದಲ ಬಾರಿಗೆ ನಟ ಸಾಧುಕೋಕಿಲ ಹದಿನೇಳು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಚಿತ್ರ ಮಾಡಲು ಇಡೀ ತಂಡದ ಸಹಕಾರ ಅಗತ್ಯ. ಚಿತ್ರರಂಗದಲ್ಲಿ ನಾನು ಮಗು ಇದ್ದ ಹಾಗೆ. ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಸಿಲ್ಜೂ ಹೇಳಿದರು. ಚಿತ್ರದ. ಸಂಗೀತ ನಿರ್ದೇಶನ ಶ್ರೀಧರ್ ವಿ ಸಂಭ್ರಮ್ , ಛಾಯಾಗ್ರಹಣ ಗಂಗು ಅವರದಾಗಿದೆ.

ಚಿತ್ರ ಉತ್ತಮವಾಗಿ ಮೂಡಿ ಬರಲು ಶ್ರಮಿಸುತ್ತಿರುವ ಮನು ಅವರ ಸಹೋದರ ವಿಕ್ರಂ ಅವರನ್ನು ಚಿತ್ರತಂಡದ ಪ್ರತಿಯೊಬ್ಬರು ವಿಶೇಷವಾಗಿ ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















