ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಂಬೈ ತಾಜ್ ಹೋಟೆಲ್ ಮೇಲೆ 26/11 2008ರಂದು ನಡೆದ ಭಯೋತ್ಪಾದಕ ದಾಳಿಗೆ 13 ವರ್ಷಗಳು ಕಳೆದಿದ್ದು, ಕರಾಳ ದಿನ ಹಿನ್ನಲೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲು ನಗರದ ಹಲವೆಡೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ಪಾಕಿಸ್ತಾನದ ಕರಾಚಿಯಿಂದ ಮುಂಬೈ ನಗರಕ್ಕೆ ಲಗ್ಗೆಯಿಟ್ಟಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಅಮಾಯಕ ಜನರು ಮತ್ತು ಯೋಧರ ನೆತ್ತರು ಹರಿಸಿ, ಭಾರತದಲ್ಲಿ ಕರಾಳ ಅಧ್ಯಾಯವನ್ನು ಸೃಷ್ಟಿಸಿದರು.
ತಾಜ್ ಹೋಟೆಲ್ನಲ್ಲಿದ್ದ ಜನರನ್ನು 3 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಉಗ್ರರು, ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ ವಿದೇಶಿಗರೂ ಸೇರಿದಂತೆ 174 ಅಮಾಯಕ ಜನರನ್ನು ಬಲಿಪಡೆದು ಅಟ್ಟಹಾಸ ಮೆರೆದಿದ್ದರು.
ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸುವ ಸಂದರ್ಭದಲ್ಲಿ 17 ಜನ ಹುತಾತ್ಮರಾಗಿದ್ದರು. ಈ ಕರಾಳ ದಿನಕ್ಕೆ ಇಂದಿಗೆ 13 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಉಗ್ರರ ದಾಳಿಯ ಆ ಕರಾಳ ದಿನಗಳು ಮತ್ತೆಂದು ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು, ಕರಾಳ ದಿನ ಹಿನ್ನಲೆಯಲ್ಲಿ ಮುಂಬೈ ನಗರದಾದ್ಯಂತ ಭಾರೀ ಕಟ್ಟೆಚ್ಚರವನ್ನು ವಹಿಸಿದ್ದಾರೆ.
ಗಣ್ಯರ ಶ್ರದ್ಧಾಂಜಲಿ:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಮುಂಬೈ 26/11 ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಹಾಗೂ ಹೇಡಿಗಳ ದಾಳಿಯಲ್ಲಿ ಭಯೋತ್ಪಾದಕರನ್ನು ಧೈರ್ಯದಿಂದ ಎದುರಿಸಿದ ಎಲ್ಲಾ ಯೋಧರಿಗೂ ತಮ್ಮ ಸೆಲ್ಯೂಟ್ ಎಂದು ಟ್ವೀಟ್ ಮಾಡಿದ್ದಾರೆ. ನಿಮ್ಮ ಶೌರ್ಯಕ್ಕೆ ಇಡೀ ದೇಶವೇ ಹೆಮ್ಮೆ ಪಡುತ್ತದೆ. ನಿಮ್ಮ ತ್ಯಾಗಕ್ಕೆ ರಾಷ್ಟ್ರ ಸದಾ ಋಣಿಯಾಗಿರಲಿದೆ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಿ, 26/11 ಮುಂಬೈ ಮೇಲಿನ ಭಯೋತ್ಪಾದನಾ ದಾಳಿಗೆ 13 ವರ್ಷಗಳಾಗಿದ್ದು, ಕಳೆದುಕೊಂಡ ಅಮಾಯಕರ ಜೀವಗಳನ್ನು ಇಂದು ನೆನೆಯುತ್ತಿದ್ದೇವೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ನ.26ರ ದಾಳಿಯ ಸಂದರ್ಭದಲ್ಲಿ ನಮ್ಮ ಯೋಧರು ಇತರರಿಗೆ ಮಾದರಿ ಎಂಬಂತೆ ಧೈರ್ಯವನ್ನು ಪ್ರದರ್ಶಿಸಿದರು. ಅವರ ಶೌರ್ಯ ಮತ್ತು ತ್ಯಾಗಕ್ಕೆ ನಾನು ವಂದಿಸುತ್ತೇನೆಂದು ತಿಳಿಸಿದ್ದಾರೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ, ದಾಳಿಯಲ್ಲಿ ಹುತಾತ್ಮರಾದ ಯೋಧರು, ಪೊಲೀಸರು ಮತ್ತು ನಾಗರೀಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post