ಬೆಂಗಳೂರು, ಅ.18: ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾಗಿ ಎರಡು ದಿನ ಕಳೆದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ, ಇದನ್ನು ಖಂಡಿಸಿ ನಾಳೆ ಮೌರ್ಯ ಸರ್ಕಲ್ ಬಳಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಸಂಸದೆ ಶೋಭ ಕರಂದ್ಲಾಜೆ ದೂರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಪೊಲೀಸ್ ಆಯುಕ್ತರು 24 ಗಂಟೆಯಲ್ಲಿ ರುದ್ರೇಶ್ ಹತ್ಯೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು. ಆದರೆ ಇದವರೆಗೆ ಯಾರನ್ನೂ ಬಂಧಿಸಿಲ್ಲ. ಕೇರಳ ರಾಜ್ಯದ ಗೂಂಡಾಗಿರಿ ನಮ್ಮ ರಾಜ್ಯಕ್ಕೂ ಕಾಲಿಟ್ಟುಬಿಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಆರ್ ಎಸ್ಎಸ್ ಮತ್ತು ಬಿಜೆಪಿಯವರ ಮೇಲಿನ ದ್ವೇಷದಿಂದ ಇಂತಹ ಹತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಎರಡೂ ಇಲ್ಲ. ಇದು ದಪ್ಪ ಚರ್ಮದ ಸರ್ಕಾರ ಎಂದು ಕಿಡಿಕಾರಿದರು.
ಕೆಡಿಎಫ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ ಸಂಘಟನೆಗಳು ಇಂತಹ ಹೇಯ ಕೃತ್ಯಗಳನ್ನು ಮಾಡುತ್ತಿವೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಸರ್ಕಾರಕ್ಕೆ ಮಾತ್ರ ಇದು ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ಇಂತಹ ಹತ್ಯೆ ನಿಜಕ್ಕೂ ಖಂಡನೀಯ. ಆರೋಪಿಗಳ ಬಂಧನವಾಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.















