ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮಿಳುನಾಡಿನ ಕೂನೂರು ಬಳಿಯಲ್ಲಿ ಕಳೆದ ವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಭೀಕರ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಹುತಾತ್ಮರಾಗಿದ್ದಾರೆ.
ವರುಣ್ ಸಿಂಗ್ ಸಾವನ್ನು ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್’ನಲ್ಲಿ ಖಚಿತಪಡಿಸಿದೆ.
ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕೂನೂರು ಬಳಿಯಲ್ಲಿ ಅಪಘಾತಕ್ಕೀಡಾಗಿತ್ತು. ಇದರಲ್ಲಿ ರಾವತ್, ಅವರ ಪತ್ನಿ ಮಧುಲಿಕಾ ಸೇರಿ 12 ಯೋಧರು ವಿಧಿವಶರಾಗಿದ್ದರು. ಅಪಘಾತದಲ್ಲಿ ತೀವ್ರವಾಗಿ ಸುಟ್ಟ ಗಾಯಗಳಾಗಿದ್ದರೂ ಬದುಕುಳಿದಿದ್ದ ವರುಣ್ ಸಿಂಗ್ ಅವರಿಗೆ ಬೆಂಗಳೂರಿನ ಸೇನಾ ಕಮಾಂಡರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಹುತಾತ್ಮರಾಗಿದ್ದಾರೆ.
ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿಯವರು, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















