ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕೊರೋನಾ ಸಂಕಷ್ಟದ ನಡುವೆಯೂ ಕೃಷ್ಣಾಪುರ ಮಠದ ಪರ್ಯಾಯ ಆರಂಭವಾಗಿದ್ದು, ಪರ್ಯಾಯ ಸಂಪ್ರದಾಯದಂತೆ ವಿದ್ಯಾಸಾಗರ ತೀರ್ಥರು ಮುಂಜಾನೆ 2.15ಕ್ಕೆ ಕಾಪುವಿನ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿದರು. 2.30ಕ್ಕೆ ಉಡುಪಿಯ ಜೋಡುಕಟ್ಟೆ ಪ್ರವೇಶಿಸಿ, ಪಟ್ಟದ ದೇವರಾದ ದ್ವಿಭುಜ ಕಾಳೀಯ ಮರ್ಧನ ಮೂರ್ತಿಗೆ ಪೂಜೆ ಸಲ್ಲಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದರು.

ಅಷ್ಟಮಠಗಳ ಯತಿಗಳು ಜೇಷ್ಠತೆ ಆಧಾರದಲ್ಲಿ ಮೇನೆಯಲ್ಲಿ (ಪಲ್ಲಕ್ಕಿ) ಕುಳಿತು ಸಾಗಿದರು. ಪರ್ಯಾಯ ಮೆರವಣಿಗೆ ರಥಬೀದಿ ಪ್ರವೇಸಿದ ಬಳಿಕ, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಮಾಡಿ, ಚಂದ್ರಮೌಳೀಶ್ವರ, ಅನಂತೇಶ್ವರ ಹಾಗೂ ಮಧ್ವಾಚಾರ್ಯರ ಸನ್ನಿಧಿಯ ದರ್ಶನ ಪಡೆದರು.

ನಂತರ ಕೃಷ್ಣಮಠದ ಚಂದ್ರಶಾಲೆಯಲ್ಲಿ ಮಾಲಿಕೆ ಮಂಗಳಾರತಿ ನಡೆಯಿತು. ಬಳಿಕ ಅದಮಾರು ಮಠದ ಈಶಪ್ರಿಯ ತೀರ್ಥರಿಂದ ಮಧ್ವಾಚಾರ್ಯ ಕರಾರ್ಚಿತ ಅಕ್ಷಯ ಪಾತ್ರೆ, ಬೆಳ್ಳಿಯ ಸಟ್ಟುಗ ಹಾಗೂ ಗರ್ಭಗುಡಿಯ ಕೀಲಿಕೈ ಪಡೆದು ಸುಮುಹೂರ್ತದಲ್ಲಿ ಪವಿತ್ರ ಸರ್ವಜ್ಞ ಪೀಠಾರೋಹಣ ಮಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಪರ್ಯಾಯ ಮೆರವಣಿಗೆ ನಡೆಯಿತು.

ಕೃಷ್ಣಮಠದ 251ನೇ ದ್ವೈವಾರ್ಷಿಕ ಪರ್ಯಾಯ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಂಡ ವಿದ್ಯಾಸಾಗರ ತೀರ್ಥರು ಸಂಪ್ರದಾಯದಂತೆ ಬಡಗುಮಾಳಿಗೆಯ ಅರಳು ಗದ್ದುಗೆಯಲ್ಲಿ ಕುಳಿತು ಅಷ್ಟಮಠಗಳ ಯತಿಗಳಿಗೆ ಗಂಧಾದ್ಯುಪಚಾರ ಮಾಡಿ, ಪಟ್ಟ ಕಾಣಿಕೆ ಸಲ್ಲಿಸಿದರು. ಮಾಲಿಕೆ ಮಂಗಳಾರತಿ ನೆರವೇರಿತು. ನಂತರ ರಾಜಾಂಗಣದಲ್ಲಿ ಎಲ್ಲ ಮಠಾಧೀಶರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪರ್ಯಾಯ ದರ್ಬಾರ್ ನಡೆಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















