ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಮ್ಮ ದೇಶ ಹಾಗೂ ನಾಡಿನ ಇತಿಹಾಸ, ಧರ್ಮ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಸರಿಯಾಗಿ ತಿಳಿಸಿಕೊಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅಭಿಪ್ರಾಯಪಟ್ಟರು.
ವಿಶ್ವ ಹಿಂದೂ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೩೮ನೆಯ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಿಂದಿನ ಇತಿಹಾಸ ಅರಿಯದವರು ಭವಿಷ್ಯದಲ್ಲಿ ಇತಿಹಾಸವನ್ನು ನಿರ್ಮಿಸಲಾರರು. ನಮ್ಮ ದೇಶದ, ನಾಡಿನ ಇತಿಹಾಸ, ಧರ್ಮ, ಸಂಸ್ಕೃತಿಯನ್ನು ನಾವುಗಳು ಅರಿತುಕೊಳ್ಳುವ ಜೊತೆಗೆ ನಮ್ಮ ಮುಂದಿನ ಪೀಳಿಗೆಯವರಿಗೆ ತಿಳಿಸಿಕೊಡಬೇಕು. ಈ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷತ್ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದರು.
Also read: ದಾವಣಗೆರೆಯ 4 ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಸಹಾಯ
ದೇಶದ ಇತಿಹಾಸದಲ್ಲಿ ಮರೆಯಾಗಿರುವ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಇದೀಗ ಅನಾವರಣಗೊಳ್ಳುತ್ತಿದ್ದು, ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವಾರು ಹಿಂದೂ ಪರ ಸಂಘಟನೆಗಳ ಹೋರಾಟಕ್ಕೆ ಇದೀಗ ಫಲ ಲಭಿಸುತ್ತಿದೆ ಎಂದರು.
ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಸ್ವಂತ ನಿವೇಶನ ಹೊಂದುವ ಮೂಲಕ ಸಮುದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಸಮಾಜದ ಎಲ್ಲರ ಸಹಕಾರದೊಂದಿಗೆ ಭವನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭವನದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.
ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಶಾಸಕ ಬಿ.ಕೆ. ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಕಾರ್ಯದರ್ಶಿ ಕೇಶವ ಹೆಗ್ಡೆ, ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ಜಿಲ್ಲಾಧ್ಯಕ್ಷ ವಾಸುದೇವ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಎಸ್. ಮುತ್ತುರಾಮಲಿಂಗಂ, ಮಾತೃ ಮಂಡಳಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಧರ್ಮಶ್ರೀ ಸಭಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ, ನಗರಸಭಾ ಅಧ್ಯಕ್ಷೆ ಗೀತಾ ರಾಜಕುಮಾರ್, ಪೌರಾಯುಕ್ತ ಮನುಕುಮಾರ್, ಸದಸ್ಯ ಆರ್. ಶ್ರೇಯಸ್, ದಾನಿ ವೇದಾವತಿ ಶಿವಮೂರ್ತಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ, ಆರ್. ಪೂರ್ವಚಾರ್, ವೈದ್ಯ ಡಾ. ನರೇಂದ್ರ ಭಟ್, ಡಿ.ಆರ್. ಶಿವಕುಮಾರ್, ವೈ.ಎಸ್. ರಾಮಮೂರ್ತಿ, ಮಂಜುನಾಥ್ ಕದಿರೇಶ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post