ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದರು.
ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.
ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಇದುವರೆಗೆ 64130 ಮೆ.ಟನ್ ರಸಗೊಬ್ಬರ ಪೂರೈಕೆಯಾಗಿದೆ. ಇದರಲ್ಲಿ 47910 ಮೆ.ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, 16220 ಮೆ.ಟನ್ ರಸಗೊಬ್ಬರ ದಾಸ್ತಾನಿದೆ. ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತ್ರಿಪಡಿಸಬೇಕು ಎಂದು ಹೇಳಿದರು.
Also read: ರಾಷ್ಟ್ರಪತಿ ಚುನಾವಣೆ: ಮಾಜಿ ಸಿಎಂ ಬಿಎಸ್ವೈ, ಸಿಎಂ ಬೊಮ್ಮಾಯಿ ಮತ ಚಲಾವಣೆ
ಕೃಷಿ ಇಲಾಖೆ ಅಧಿಕಾರಿಗಳು ನಿರಂತರವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ಲಭ್ಯತೆ ಬಗ್ಗೆ ಪರಿಶೀಲಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಕಲಬೆರಕೆ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಿ ನಿರಂತರ ತಪಾಸಣೆ ಕಾರ್ಯ ಕೈಗೊಳ್ಳಬೇಕು. ರಸಗೊಬ್ಬರದ ಗುಣಮಟ್ಟದ ಬಗ್ಗೆ ದೂರುಗಳು ಬಂದ ತಕ್ಷಣ ಪರಿಶೀಲನೆ ನಡೆಸಿ, ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದರು.
ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಬಗ್ಗೆ ವಿವರಗಳನ್ನು ಪ್ರಕಟಿಸಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆ ಕುರಿತು ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಬೆಳೆ ಹಾನಿ ಸಮೀಕ್ಷೆ ನಡೆಸಿ:
ಅತಿವೃಷ್ಟಿಯಿಂದ ಜಿಲ್ಲೆಯ ವಿವಿದೆಡೆ ಉಂಟಾಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸಬೇಕು. ನೆರೆ ನೀರು ಕಡಿಮೆಯಾದ ತಕ್ಷಣ ಬೆಳೆ ಹಾನಿ ಸಮೀಕ್ಷೆ ಆರಂಭಿಸಬೇಕು. ಬೆಳೆ ಹಾನಿ ಕುರಿತು ಎನ್ಡಿಆರ್ಎಫ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಳೆಹಾನಿ ಸಂಭವಿಸಿದ ರೈತರಿಗೆ ಸೂಕ್ತ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಬಿತ್ತನೆ ಗುರಿ:
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 79602 ಹೆಕ್ಟೇರ್ ಭತ್ತ ಕೃಷಿ ಗುರಿ ಹೊಂದಲಾಗಿದ್ದು, ಇದುವರೆಗೆ 6776 ಹೆಕ್ಟೇರ್, 53ಸಾವಿರ ಹೆಕ್ಟೇರ್ ಮುಸುಕಿನ ಜೋಳ ಗುರಿ ಹೊಂದಲಾಗಿದ್ದು, 45795 ಹೆಕ್ಟೇರ್ ಗುರಿ ಸಾಧಿಸಲಾಗಿದೆ. ಒಟ್ಟಾರೆಯಾಗಿ 135184 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, 54042 ಹೆಕ್ಟೇರ್ ಬಿತ್ತನೆ ಗುರಿಯನ್ನು ಸಾಧಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಅವರು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post