ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ಗೆದ್ದವರನ್ನು ಪ್ರೋತ್ಸಾಹಿಸಬೇಕು. ಸೋತವರು ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದ್ದಾರೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಹಾಗೂ ಜಿಲ್ಲಾ ಬಾಲಭವನ ಸಂಸ್ಥೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
5 ನೇ ತರಗತಿವರೆಗೆ ಮಕ್ಕಳು ಶಾಲೆಯಲ್ಲಿ ಓದುವುದರ ಜೊತೆಗೆ, ಶಾಲೆಯಲ್ಲಿಯೇ ಹೋಂ ವರ್ಕ್ ಮಾಡಿಕೊಳ್ಳಬೇಕು. ಉಳಿದಂತೆ ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಓದಿನ ಜೊತೆಗೆ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದರಿಂದ ಶಾಲೆಗೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಅವರು ಹೇಳಿದರು.
ಇದಕ್ಕೂ ಮೊದಲು ವಿದ್ಯಾರ್ಥಿಗಳಿಂದ ಯಾವ ಯಾವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತೀರ ಎಂದು ಜಿಲ್ಲಾಧಿಕಾರಿ ಮಾಹಿತಿ ಪಡೆದರು. ವಿದ್ಯಾರ್ಥಿಗಳು ಚೆಸ್, ಕೇರಂ, ಕಬಡ್ಡಿ, ಖೋಖೋ, ಈಜು, ಕುಂಟಬಿಲ್ಲೆ ಓಟ, ಬ್ಯಾಡ್ಮಿಂಟನ್ ಹಾಗೆಯೇ ಹಾಡುಗಾರಿಕೆ ಹೀಗೆ ವಿವಿಧ ಆಟ ಹಾಗೂ ಸಂಗೀತ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ರೈ ಅವರು ಮಾತನಾಡಿ ಮಕ್ಕಳು ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ಆತ್ಮವಿಶ್ವಾಸ ಉಂಟಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.
Also read: ಲಕ್ಷ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಡಾ. ಧನಂಜಯ ಸರ್ಜಿ ಭಾಗಿ
ಸಂಗೀತ ಶಿಕ್ಷಕರಾದ ಭಾರತಿ ರಮೇಶ್ ಅವರು ಮಾತನಾಡಿ ಪ್ರತಿಯೊಬ್ಬರಲ್ಲಿ ಪ್ರತಿಭೆ ಇದ್ದು, ಚಿಕ್ಕಂದಿನಿಂದಲೇ ಮಕ್ಕಳಿಗೆ ಸಲಹೆ, ಮಾರ್ಗದರ್ಶನ ಮಾಡುವಂತಾಗಬೇಕು. ಸ್ಪೂರ್ತಿ ಬೆಳೆಯುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎನ್.ಮಂಜುನಾಥ್, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ, ನೃತ್ಯ ಶಿಕ್ಷಕರಾದ ಭರತ್, ಕಾರ್ಯಕ್ರಮ ಅಧಿಕಾರಿ ಪೂಣಚ್ಚ, ಬಾಲ ಭವನ ಸೊಸೈಟಿಯ ಪೂಜಾ, ಇತರರು ಇದ್ದರು. ಶಿಶು ಕಲ್ಯಾಣ ಸಂಸ್ಥೆಯ ವಿದ್ಯಾರ್ಥಿನೀಯರು ಪ್ರಾರ್ಥಿಸಿದರು. ಸತ್ಯಭಾಮ ನಿರೂಪಿಸಿದರು. ಜಯಂತಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post