ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಅಚ್ಚುಕಟ್ಟು ಪ್ರದೇಶ ವಿಭಿನ್ನ ಹವಾಮಾನ ಮತ್ತು ಮಣ್ಣಿನ ಗುಣ ಹೊಂದಿದೆ. ಈ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ನೀರು ಹರಿಸುವುದು ಮತ್ತು ಬಂದ್ ಮಾಡುವುದು ಕಷ್ಟಸಾಧ್ಯ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
ಪ್ರಸಕ್ತ 2022/23 ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡದಂಡೆ ನಾಲೆ, ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಯ ಮೂಲಕ ಅಚ್ಚುಕಟ್ಟು ಭಾಗಗಳಿಗೆ ನೀರು ಹರಿಸುವ ಹಾಗೂ ಬೆಳೆ ಕ್ಷೇತ್ರ ಪ್ರಕಟಿಸುವ ಸಂಬಂಧ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 82ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
ಭದ್ರಾವತಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲುಭೂಮಿ, ಕೆಂಪುಮಿಶ್ರತ ಮಣ್ಣಿನಲ್ಲಿ ಅಡಿಕೆ ಇತ್ಯಾದಿ ಬೆಳೆಯಲಾಗುತ್ತಿದ್ದು ಈ ಮಣ್ಣು 20 ರಿಂದ 25 ದಿನಕ್ಕೆ ಮಾತ್ರ ನೀರನ್ನು ಹಿಡಿದಿಡಲು ಸಾಧ್ಯವಿದ್ದು, ದಾವಣಗೆರೆ, ಮಲೆಬೆನ್ನೂರು, ಹರಿಹರ ಭಾಗದಲ್ಲಿ ಎರೆಮಣ್ಣಿದ್ದು ಒಂದು ತಿಂಗಳವರೆಗೆ ನೀರನ್ನು ತಡೆದಿಡುವ ಸಾಮರ್ಥ್ಯ ಅಲ್ಲಿನ ಮಣ್ಣಿಗೆ ಇರುತ್ತದೆ ಆದ್ದರಿಂದ ಆ ಭಾಗಕ್ಕೆ ಸ್ವಲ್ವ ತಡವಾಗಿ ನೀರು ಹರಿಸಬೇಕೆಂದು ರೈತರು ಮನವಿ ಮಾಡಿದರು.
ಅಧಿಕಾರಿಗಳು ಅಚ್ಚುಕಟ್ಟು ಪ್ರದೇಶದ ರೈತರಿಗೆ ಪೂರಕವಾಗಿ ಸ್ಪಂದಿಸಬೇಕು, ಪ್ರತಿಯೊಬ್ಬ ಅಧಿಕಾರಿಗಳು ರೈತರಿಗೆ ಬೆಲೆ ಕೊಡಬೇಕು, ರೈತರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ದೂರವಾಣಿ ಕರೆ ಮಾಡಿದ ಸಮಯದಲ್ಲಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಎಚ್ಚರಿಕೆ ನೀಡಿದರು.
ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ ನಾಲಾ ಸ್ಥಿತಿ ಗತಿಯ ಕುರಿತು ಅಧ್ಯಯನ ನಡೆಸಿದ್ದು, ನರೇಗಾ ಯೋಜನೆಯಡಿ ಚಾನಲ್ಗಳಲ್ಲಿ ಹೂಳು ತೆಗೆಸಲಾಗಿದೆ. ಇದನ್ನು ಪ್ರತಿಯೊಬ್ಬ ಅಧಿಕಾರಿಗಳು ಗಮನದಲ್ಲಿರಿಸಿಕೊಂಡು, ನಾಲೆಗಳ ಮೇಲೆ ಎಲ್ಲಾ ಇಂಜಿನಿಯರುಗಳು ಸುತ್ತಾಡಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ನಾಲೆಯ ನೀರು ಬಂದ್ ಆದ ಸಮಯದಲ್ಲಿ ನರೇಗಾ ಯೋಜನೆ ಬಳಸಿಕೊಂಡು ಮುಖ್ಯನಾಲೆ ಮತ್ತು ಉಪನಾಲೆಯ ಹೂಳೆತ್ತುವ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.
ನವಂಬರ್ 25 ರಿಂದ ಡಿಸೆಂಬರ್ 25ರವರೆಗೆ ಬಲದಂಡೆ ಮತ್ತು ಎಡದಂಡೆ ನಾಲೆಯ ನೀರು ನಿಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ನೀರಾವರಿ ಸಲಹ ಸಮಿತಿಯ ಸದಸ್ಯರುಗಳು ಮತ್ತು ರೈತ ಮುಖಂಡರು ಮತ್ತು ಭದ್ರ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರುಗಳು ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ರೈತರು ಮತ್ತು ಭದ್ರಾ ಕಾಡಾ ಮತ್ತು ನೀರಾವರಿ ಇಲಾಖೆಯ ಸಮಸ್ತ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















