ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಳಗಾವಿ: ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ ರಾಜ್ಯಗಳ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು.
ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅವರ ಕಚೇರಿಯಲ್ಲಿ ಸೋಮವಾರ (ಮೇ 18) ನಡೆದ ಗಟ್ಟಿ ಬಸವಣ್ಣ ಯೋಜನೆ ಕುರಿತ ಸಭೆಗಿಂತ ಮುಂಚೆ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಮಹಾರಾಷ್ಟ್ರ ಜತೆ ನೀರು ವಿನಿಮಯ ಕುರಿತು ಶೀಘ್ರದಲ್ಲಿಯೇ ಆ ರಾಜ್ಯದ ನೀರಾವರಿ ಸಚಿವರ ಜತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಲಾಗುವುದು. ಆದರೆ ಸಭೆಯ ದಿನಾಂಕ ಇನ್ನೂ ನಿಗದಿ ಆಗಿಲ್ಲ ಎಂದರು.
ಸಭೆಯಲ್ಲಿ ಪರಸ್ಪರ ಚರ್ಚಿಸಿದ ಬಳಿಕವೇ ನೀರು ವಿನಿಮಯ ಕುರಿತು ಸರ್ಕಾರದ ತೀರ್ಮಾನ ಪ್ರಕಟಿಸಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರ ಹಿತರಕ್ಷಣೆ ಮತ್ತು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಅವರ ಆಶಯದ ಪ್ರಕಾರವೇ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಜಲಾಶಯಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುತ್ತಿದ್ದು, ಮುಂದಿನ ವಾರ ಮೈಸೂರು ಭಾಗದಲ್ಲಿ ಭೇಟಿ ನೀಡಲಿದ್ದೇನೆ. ಬೆಳಗಾವಿ ಜಿಲ್ಲೆಯ ಎಲ್ಲ 18 ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಚುರುಕುಗೊಳಿಸಲಾಗುತ್ತದೆ ಎಂದು ತಿಳಿಸಿದರು.
ರಸ್ತೆ ಮೂಲಕ ದೆಹಲಿಗೆ ಪ್ರಯಾಣ-ಚಿಂತನೆ
ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲ ಆಯೋಗದ ಜತೆ ಚರ್ಚಿಸಿ, ಮನವರಿಕೆ ಮಾಡಬೇಕಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಿರುವುದರಿಂದ ರಸ್ತೆ ಮಾರ್ಗದ ಮೂಲಕವೇ ದೆಹಲಿಗೆ ತೆರಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ವೈದ್ಯರ ಸಲಹೆ ಮತ್ತು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿದರೆ ಕೊರೊನಾ ತಡೆಗಟ್ಟುವುದು ದೊಡ್ಡ ಸವಾಲು ಅಲ್ಲ. ಆದ್ದರಿಂದ ಎಲ್ಲರೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜಗದೀಶ್ ಶೆಟ್ಟರ್ ಅವರು, ಜಿಲ್ಲೆಯ ಜನರ ಸಮಸ್ಯೆಗಳಿಗೆ ಅತ್ಯುತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸಚಿವ ಜಾರಕಿಹೊಳಿ ಹೇಳಿದರು.
ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post