ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶೇಷ ಅಗತ್ಯಗಳಿರುವ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾದ ಸುಲಭ ಪ್ರವೇಶದ ಶೌಚಾಲಯವನ್ನು ನಗರದ ವಿನೋಬಾ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.
ನಾರಾಯಣ ಹೆಲ್ತ್ ಸಂಸ್ಥೆಯ ಸಿಎಸ್ಆರ್ (ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ಈ ಶೌಚಾಲಯವನ್ನು ನಿರ್ಮಿಸಲಾಗಿದ್ದು, ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೆಂಬಲ ನೀಡಿದೆ. ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
Also Read>> ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ
ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ರಾಜೇಶ್ವರಿ ಸಿಂಗ್ ಅವರು ಸೌಲಭ್ಯವನ್ನು ಉದ್ಘಾಟಿಸಿದರು.
ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ ಶರ್ಮ ಮಾತನಾಡಿ, ವಿಶೇಷ ಮಕ್ಕಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಈ ಶೌಚಾಲಯವು ಅವರಿಗೆ ಸುರಕ್ಷಿತ, ಸ್ವಚ್ಛ ಹಾಗೂ ಸುಲಭ ಬಳಕೆಯ ವ್ಯವಸ್ಥೆಯನ್ನು ಒದಗಿಸಲಿದೆ. ಇದು ಶಾಲೆಯಲ್ಲಿನ ವಿಶೇಷ ಅಗತ್ಯಗಳಿರುವ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಗಳಿಗೆ ಸಹಕಾರಿಯಾಗಲಿದ್ದು, ಅವರ ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಹೇಳಿದರು.
ಸಂಸ್ಥೆಯ ಮಾರ್ಕೆಟಿಂಗ್ ಮತ್ತು ಗ್ರೋಥ್ ಕ್ಲಸ್ಟರ್ ಮುಖ್ಯಸ್ಥರಾದ ರಾಜಾಸಿಂಗ್ ಮಾತನಾಡಿ, ಶಾಲಾ ಮಕ್ಕಳಿಗೆ ಸಮಾನ ಅವಕಾಶಗಳು ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ನಾರಾಯಣ ಹೆಲ್ತ್ ಈ ಯೋಜನೆಯನ್ನು ಕೈಗೊಂಡಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಒಳಗೊಳ್ಳುವಿಕೆ (Inclusivity) ಮತ್ತು ಪ್ರವೇಶಸಾಧ್ಯತೆ (Accessibility) ಹೆಚ್ಚಿಸುವಲ್ಲಿ ಇಂತಹ ಯೋಜನೆಗಳು ಮಹತ್ವದ್ದಾಗಿವೆ ಎಂದು ತಿಳಿಸಿದ್ದಾರೆ.
Also Read>> ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ
ಕಾರ್ಯಕ್ರಮದಲ್ಲಿ ಮಾರ್ಕೆಟಿಂಗ್ ವಿಭಾಗದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಂತಕುಮಾರ, ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆಯ ಅಧ್ಯಕ್ಷರಾದ ಅನ್ನಪೂರ್ಣ ರಂಗರಾಜನ್, ಕಾರ್ಯದರ್ಶಿ ಸುಮಾ ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕರಿಯಮ್ಮ, ರೋಟರಿ ಕ್ಲಬ್ ಶಿವಮೊಗ್ಗದ ಸದಸ್ಯ ಬಸವರಾಜ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಎಸ್.ಎನ್. ಶೈಲೇಶ್ ಸೇರಿದಂತೆ ನಾರಾಯಣ ಹೆಲ್ತ್, ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















