ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಬಳ್ಳಾರಿ ನಗರದ ವಿವಿಧೆಡೆ ಮಂಗಳವಾರದಂದು ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
91-ಕಂಪ್ಲಿ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ನಗರದ ಸುಧಾಕ್ರಾಸ್ನ ಸೆಂಟ್ ಫಿಲೊಮೀನಾಸ್ ಹೈಸ್ಕೂಲ್ ಆವರಣದಲ್ಲಿ ನಡೆಯಿತು, ಚುನಾವಣಾಧಿಕಾರಿ ಡಾ. ನಯನ ಅವರು ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಮಸ್ಟರಿಂಗ್ ಕಾರ್ಯ ಸುಗಮವಾಗಿ ನಡೆಯಲು ವ್ಯವಸ್ಥೆಗೊಳಿಸಿದ್ದರು. 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿ ನೆರವೇರಿತು, ಚುನಾವಣಾಧಿಕಾರಿ ಹೇಮಂತ್ ಅವರು ಸ್ಥಳದಲ್ಲಿಯೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಂಡರು. ಇನ್ನು 94-ಬಳ್ಳಾರಿ ನಗರ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ನಗರದ ಕೋಟೆ ಪ್ರದೇಶದ ಸೆಂಟ್ ಜಾನ್ಸ್ ಕಂಪೋಸಿಟ್ ಜ್ಯೂನಿಯರ್ ಕಾಲೇಜ್ನಲ್ಲಿ ಮಂಗಳವಾರ ಅಚ್ಚುಕಟ್ಟಾಗಿ ಜರುಗಿತು. ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಚುನಾವಣಾಧಿಕಾರಿ ರುದ್ರೇಶ್ ಅವರು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು.
ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗುವ ಕಾಲೇಜುಗಳ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ಗಾಗಿ ನಿಯೋಜಿತಗೊಂಡಿರುವ ಪೊಲೀಸರು, ಸಿಆರ್ಪಿಎಫ್ ಯೋಧರು, ಗೃಹರಕ್ಷಕದಳದವರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು, ಯೋಧರನ್ನು ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್ಗಳು ಕಾಲೇಜುಗಳ ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಆಯಾ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ, ಬಸ್, ಕ್ರೂಸರ್ ಹಾಗೂ ಮಿನಿ ಬಸ್ ಮುಂತಾದ ವಾಹನಗಳನ್ನು ನಿಯೋಜಿಸಲಾಗಿತ್ತು. ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್ವಾರು ಕೌಂಟರ್ಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು. ಮಸ್ಟರಿಂಗ್ ಕಾರ್ಯಕ್ಕೆ ಆಗಮಿಸಿದ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಲ್ಲಿ, ತ್ವರಿತ ಸ್ಪಂದನೆಗಾಗಿ, ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.
ಮಾರ್ಗದರ್ಶನ ಮಾಡಿದ ಡಿಸಿ: ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜುಗಳ ಆವರಣಕ್ಕೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.
ಅಚ್ಚುಕಟ್ಟಾದ ವ್ಯವಸ್ಥೆ: ನಗರದ ವಿವಿಧ ಶಾಲಾ ಕಾಲೇಜು ಆವರಣದಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು. ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಟೋಪಹಾರದ ವ್ಯವಸ್ಥೆ ಕೈಗೊಳ್ಳಲಾಯಿತು. ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟ ಪೂರೈಸಿಕೊಂಡು ಹೋಗುವ ರೀತಿ ವ್ಯವಸ್ಥೆ ಮಾಡಲಾಯಿತು. ಮಧ್ಯಾಹ್ನದ ಊಟಕ್ಕೆ ಚಪಾತಿ, ಬದನೆಕಾಯಿ ಪಲ್ಯೆ, ಅನ್ನ ಸಾಂಬಾರ್ ಜೊತೆಗೆ, ಮೈಸೂರ್ಪಾಕ್ ಮತ್ತು ಜಿಲೇಬಿ ಸಿಹಿ ತಿನಿಸಿನ ವ್ಯವಸ್ಥೆ ಮಾಡಲಾಗಿತ್ತು. ಊಟದ ವಿತರಣೆ ಸ್ಥಳದಲ್ಲಿ ಗೊಂದಲ ಉಂಟಾಗದಂತೆ, ಸಾಕಷ್ಟು ಸಂಖ್ಯೆಯಲ್ಲಿ ಕೌಂಟರ್ಗಳನ್ನು ತೆರೆದು, ಸರದಿ ಸಾಲಿನಲ್ಲಿ ಬಂದು ಊಟ ಸ್ವೀಕರಿಸಲು ವ್ಯವಸ್ಥೆಗೊಳಿಸಲಾಗಿತ್ತು. ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಮಧ್ಯಾಹ್ನದ ಊಟ ಸವಿದ ಅಧಿಕಾರಿ, ಸಿಬ್ಬಂದಿಗಳು, ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಆಯಾ ಮಾರ್ಗದ ವಾಹನಗಳ ಮೂಲಕ ತೆರಳಿದರು.
Also read: ಮೇ 13ರಂದು ಶಿವಮೊಗ್ಗದ ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧ: ಹೀಗಿದೆ ಬದಲಿ ಮಾರ್ಗ
1222 ಮತಗಟ್ಟೆಗಳು: ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 676 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 515 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಂಪ್ಲಿ-240, ಸಿರಗುಪ್ಪ-227, ಬಳ್ಳಾರಿ ಗ್ರಾಮೀಣ-242, ಬಳ್ಳಾರಿ ನಗರ-262 ಹಾಗೂ ಸಂಡೂರು ಕ್ಷೇತ್ರದಲ್ಲಿ 251 ಮತಗಟ್ಟೆಗಳಿವೆ. ಜಿಲ್ಲೆಯ 5 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 295 ಸೂಕ್ಷ್ಮ ಹಾಗೂ 73 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಿಗೆ 2445 (ಬ್ಯಾಲೆಟ್ ಯುನಿಟ್), 1716 (ಕಂಟ್ರೋಲ್ ಯುನಿಟ್) ಮತ್ತು 1857 (ವಿ.ವಿ.ಪ್ಯಾಟ್)ಗಳನ್ನು ಬಳಸಲಾಗುತ್ತಿದೆ. ಜಿಲ್ಲೆಯ ಒಟ್ಟು 1,222 ಮತಗಟ್ಟೆಗಳ ಪೈಕಿ 700 ಮತಗಟ್ಟೆಗಳಿಗೆ ಅಂದರೆ ಶೇ. 50 ಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಸಿಸಿ ಟಿವಿ ಕ್ಯಾಮೆರಾ ಮೂಲಕ ನೇರವಾಗಿ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
5,815 ಸಿಬ್ಬಂದಿ ಮತಗಟ್ಟೆ ಕರ್ತವ್ಯಕ್ಕೆ ನೇಮಕ: ಜಿಲ್ಲೆಯಲ್ಲಿ ಮತದಾನ ಕಾರ್ಯ ಸಮರ್ಪಕವಾಗಿ ಜರುಗಿಸಲು ಒಟ್ಟು 5815 ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 1,457 ಪಿ.ಆರ್.ಒ, 1,483 ಎ.ಪಿ.ಆರ್.ಒ, 2,875 ಪಿ.ಓ ಹಾಗೂ ಹೆಚ್ಚುವರಿಯಾಗಿ 99 ಸಿಬ್ಬಂದಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕಂಪ್ಲಿ ಕ್ಷೇತ್ರಕ್ಕೆ 1137, ಸಿರಗುಪ್ಪ-1093, ಬಳ್ಳಾರಿ ಗ್ರಾಮೀಣ-1172, ಬಳ್ಳಾರಿ ನಗರ-1226 ಹಾಗೂ ಸಂಡೂರು ಕ್ಷೇತ್ರಕ್ಕೆ 1187 ಸಿಬ್ಬಂದಿಗಳು ಮತದಾನ ದಿನದ ಕಾರ್ಯಕ್ಕೆ ನಿಯೋಜಿತಗೊಂಡಿದ್ದಾರೆ.
ಭದ್ರತೆಗೆ ವ್ಯವಸ್ಥೆ: ಮತದಾನ ದಿನದಂದು ಮತಗಟ್ಟೆಗಳಿಗೆ ಭದ್ರತೆಯನ್ನು ಒದಗಿಸಲು, 1 ಎಸ್ಪಿ, 1 ಡಿವೈಎಸ್ಪಿ, 22 ಸಿಪಿಐ/ಪಿಐ, 44 ಪಿಎಸ್ಐ, 116 ಎಎಸ್ಐ, 952 ಹೆಚ್ಸಿ ಮತ್ತು ಪಿಸಿ, 591 ಗೃಹ ರಕ್ಷಕ ದಳ ಸಿಬ್ಬಂದಿ, 4 ಜನ ಅರಣ್ಯ ಸಿಬ್ಬಂದಿ ಸೇರಿ ಒಟ್ಟು 1,738 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ ಜಿಲ್ಲೆಯವರು 741, ಹೊರಗಿನವರು 922, ಡಿಎಆರ್ ಸಿಬ್ಬಂದಿ 75, ಸಿಎಪಿಎಫ್ 12, ಕೆಎಸ್ಆರ್ಪಿ 5 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
11,52,411 ಮತದಾರರು: ಜಿಲ್ಲೆಯಲ್ಲಿ 5,67,319 ಪುರುಷ ಮತದಾರರು ಮತ್ತು 5,84,920 ಮಹಿಳಾ ಮತದಾರರು, 172 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 11,52,411 ಮತದಾರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ 39,359 ಯುವ ಮತದಾರರು ಪ್ರಥಮ ಬಾರಿಗೆ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ.
ಮತದಾನ ಕಾರ್ಯ ಮೇ. 10 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಡೆಯಲಿದ್ದು, ಸುಗಮ ಮತದಾನಕ್ಕೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಮತದಾರರು ತಪ್ಪದೆ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಲಿ ಎಂಬುದು ಜಿಲ್ಲಾಡಳಿತದ ಆಶಯವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















