ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಸಕ್ತಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ಇಲ್ಲ. ಆದರೆ, ಜೆಡಿಎಸ್ ಅಭ್ಯರ್ಥಿಗಳನ್ನೇ ಬೆಂಬಲಿಸುವ ನಿರ್ಧಾರಕ್ಕೆ ತೆಲಂಗಾಣ ಮುಖ್ಯಮಂತ್ರಿಗಳು ಬಂದಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
2024ರ ಲೋಕಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಸಿಆರ್ ಅವರು ಚಿಂತನೆ ನಡೆಸಿದ್ದಾರೆ. ಅದರಂತೆ ರಾಜ್ಯದ ಗಡಿ ಭಾಗದಲ್ಲಿ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದ್ದಾರೆ ಎಂದು ಅವರು ಹೇಳಿದರು.
Also read: ಅ.13 ರಿಂದ ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಕುಂಭ ಮೇಳ, 6 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ: ಸಚಿವ ಗೋಪಾಲಯ್ಯ
ನಮ್ಮ ಪಕ್ಷದ ಶಾಸಕರ ಜತೆ ಸೇರಿ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇನೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. 2006ರ 20 ತಿಂಗಳ ನಿಮ್ಮ ಆಡಳಿತ ನೋಡಿದ್ದೇನೆ. ಯಾವುದೇ ಕಪ್ಪುಚುಕ್ಕೆ ಇಲ್ಲದ ರೀತಿ ಆಡಳಿತ ನಡೆಸಿದ್ದೀರಿ. ಅದೇ ರೀತಿ ಮುಂದುವರೆಯಿರಿ ಎಂದು ಅವರು ನನಗೆ ಸಲಹೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ದಲಿತರ ಮೇಲಿನ ದೌರ್ಜನ್ಯ, ರೈತರ ನೆರವಿಗೆ ಧಾವಿಸುವ ಸಲುವಾಗಿ ನಾವು ಒಗ್ಗೂಡುತ್ತಿದ್ದೇವೆ. ಅದನ್ನೇ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮಾಡಿಕೊಂಡು ಮುಂದುವರಿಯುತ್ತಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈಗ ಟಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು ಕುಮಾರಸ್ವಾಮಿ.
ರಾಜ್ಯದಲ್ಲಿ ರೈತಬಂಧು ಯಾಜನೆ ಜಾರಿ:
ತೆಲಂಗಾಣದಲ್ಲಿ ಜಾರಿ ಮಾಡಲಾಗಿರುವ ರೈತಬಂದು, ದಲಿತ ಬಂಧು ಯೋಜನೆಗಳನ್ನು ರಾಜ್ಯದಲ್ಲಿಯೂ ಜಾರಿಗೆ ತರಲಾಗುವುದು ಎಂದು ಹೇಳಿದ ಕುಮಾರಸ್ವಾಮಿ ಅವರು; ಅಲ್ಲಿ ರೈತಬಂಧು ಯೋಜನೆಯಡಿ 24 ಗಂಟೆ ಉಚಿತ ವಿದ್ಯುತ್, ಪ್ರತಿ ವರ್ಷ ಎಕರೆಗೆ ಹತ್ತು ಸಾವಿರ ಸಹಾಯ ಧನ ಕೊಡುತ್ತಿದ್ದಾರೆ. ರೈತ ಅಕಾಲಿಕ ಮರಣಕ್ಕೀಡಾದರೆ ತಕ್ಷಣ 5 ಲಕ್ಷ ರೂಪಾಯಿ ವಿಮಾ ಪರಿಹಾರ ತಲುಪಿಸುತ್ತಿದ್ದಾರೆ. ರೈತರಿಗೆ ವಿಮೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಮೂಲಕ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ದಲಿತರಿಗೆ ಕುಟುಂಬದಲ್ಲಿಯೇ ಸ್ವ ಉದ್ಯೋಗ ಮಾಡಲು ಹತ್ತು ಲಕ್ಷ ರೂಪಾಯಿ ನೆರವನ್ನು ನೀಡುತ್ತಿದೆ ತೆಲಂಗಾಣ ಸರಕಾರ. ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡುವ ದಲಿತಬಂಧು ಯೋಜನೆ ಮಾಡಲಾಗಿದೆ. ಪ್ರತಿ ಜಿಲ್ಲೆಯಿಂದ ಕೆಲ ಸಂಘಟನೆ, ಪ್ರಗತಿ ಪರ ರೈತರು, ದಲಿತ ಸಂಘಟನೆ ಮುಖಂಡರನ್ನ ತೆಲಾಂಗಣಕ್ಕೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಿ. ಈ ಮೂಲಕ ನಿಮ್ಮ ಚುನಾವಣಾ ಪ್ರಚಾರಕ್ಕೆ ಈ ಅಂಶಗಳನ್ನು ಅಳವಡಿಸಿಕೊಳ್ಳಿ ಎಂದು ಕೆಸಿಆರ್ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.
ನಮ್ಮ ಸಾಗುವಳಿ ಚೀಟಿ ಸಿಕ್ಕಿರುವುದು ರಾಜ್ಯಕ್ಕೆ ಮಾತ್ರ:
ನಾನು ರಾಷ್ಟ್ರಮಟ್ಟದ ರಾಜಕೀಯಕ್ಕೆ ಹೋಗಲು ನಮ್ಮದು ಸಣ್ಣ ಪಕ್ಷ. ನಮಗೆ ಸಾಗುವಳಿ ಚೀಟಿ ಸಿಕ್ಕಿರುವುದು ಕರ್ನಾಟಕದ್ದು ಮಾತ್ರ. ಹೀಗಾಗಿ ನಾವು ಹೊರಗೆ ಬಕರ್ ಹುಕುಂ ಜಾಗ ಹುಡುಕುವುದಕ್ಕೆ ಆಗುತ್ತಾ ಎಂದ ಕುಮಾರಸ್ವಾಮಿ ಅವರು, ಕರ್ನಾಟಕ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಭಾವ ಬೀರುತ್ತದೆ ಎಂದರು.
ರಾಜ್ಯದಲ್ಲಿ 15-20 ಕ್ಷೇತ್ರಗಳ ಮೇಲೆ ಕೆಸಿಆರ್ ಪ್ರಭಾವ ಇರಬಹುದು. ಅವರ ಅನೇಕ ಶಾಸಕರುಗಳಿಗೆ ಆ ಭಾಗದಲ್ಲಿ ನೆಂಟಸ್ಥನ ಇದೆ. ಹೈದರಾಬಾದ್ ಕರ್ನಾಟಕದಲ್ಲಿ ನಾವು ನಾಲ್ಕು ಸ್ಥಾನ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ ನಾವು 15-20 ಕ್ಷೇತ್ರ ಕಲ್ಯಾಣ ಕರ್ನಾಟಕದಲ್ಲಿ ಗೆಲ್ಲಬಹುದು. ಅಲ್ಲಿ ನಮ್ಮ ಪಕ್ಷದ ಸಂಘಟನೆ ಉತ್ತಮವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post