ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೇ 20ರಿಂದ 25ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೇ 20ರ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಗೂ ಮೇ 21ರ ತನಕ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮೇ 24ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣಗಳಿವೆ ಎಂದು ವರದಿಯಾಗಿದೆ.
ಮಲೆನಾಡು, ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೇ 20ರ ತನಕ ಕೊಡಗು ಹಾಗೂ 21ರ ತನಕ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯಾದರೆ. ಮೇ 24ರಿಂದ ಮುಂಗಾರಿನ ಉತ್ತಮ ಮಳೆಯ ನಿರೀಕ್ಷೆ ಇದೆ.
ರಾಜ್ಯದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲೂ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೇ 21ರ ತನಕ ದಕ್ಷಿಣ ಒಳನಾಡು ಹಾಗೂ 22ರ ತನಕ ಉತ್ತರ ಒಳನಾಡು ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಬಿಡುವು ಪಡೆದರೂ ಮೇ 24ರಿಂದ ಅಲ್ಲಲ್ಲಿ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post