ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕುವೆಂಪುರವರು ತಮ್ಮ ಸಾಹಿತ್ಯದ ಮೂಲಕ ಸರ್ವ ಜನಾಂಗದ ಶಾಂತಿಯ ತೋಟವನ್ನು ಪ್ರಾರಂಭಿಸಿದರು. ವಿದ್ಯಾರ್ಥಿಗಳೆಲ್ಲರೂ ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಮತ್ತು ಮೌಲ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಡಾ. ಅಪ್ಪಗೆರೆ ತಿಮ್ಮರಾಜು ಹೇಳಿದರು.
ಶ್ರೀ ಕೃಷ್ಣ ಪದವಿ ಕಾಲೇಜಿನ ನವ ಚೈತನ್ಯ ಕನ್ನಡ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು, ಕನ್ನಡದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸುತ್ತಾ ಅವರೆಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಮುಖ್ಯ ಅತಿಥಿಗಳಾಗಿ ಜಾನಪದ ಶ್ರೀ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಅಂತರಾಷ್ಟ್ರೀಯ ಪ್ರಸಿದ್ಧ ಜಾನಪದ ಗಾಯಕರು ಆದ ಡಾ. ಅಪ್ಪಗೆರೆ ತಿಮ್ಮರಾಜು, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ.ರುಕ್ಮಾಂಗದ ನಾಯ್ಡು, ಸ್ನಾತಕೋತ್ತರ ವಿಭಾಗದ ನಿರ್ದೇಶಕರಾದ ಪ್ರೊ. ವೇಣುಗೋಪಾಲ್, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಸ್.ಪಿ. ಮನೋಹರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾ ಕುಮಾರಿ, ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷರಾದ ಡಾ. ರುಕ್ಮಾಂಗದ ನಾಯ್ಡು ಅವರು ಮಾತನಾಡುತ್ತಾ ಮೊದಲು ಎಲ್ಲಾ ವಿದ್ಯಾರ್ಥಿಗಳು ತಂದೆ ತಾಯಿಗಳಿಗೆ ಗುರು ಹಿರಿಯರಿಗೆ ಗೌರವಿಸುವುದನ್ನು ಕಲಿಯಬೇಕು ಅದರಂತೆ ಕರ್ನಾಟಕದಲ್ಲಿ ಇರುವ ಎಲ್ಲಾ ಕನ್ನಡಿಗರು ಕನ್ನಡದಲ್ಲಿ ಮಾತನಾಡುವ ಮೂಲಕ ಮತ್ತು ಬರವಣಿಗೆಯೊಂದಿಗೆ ಹೆಚ್ಚು ಗೌರವವನ್ನು ಸಲ್ಲಿಸಬೇಕು. ತಮ್ಮಲ್ಲಿ ಕನ್ನಡದ ಬಗ್ಗೆ ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು. ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















