ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯಾವುದೇ ಕಾರಣಕ್ಕೂ ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ರಾಜ್ಯದ ಹಿಂದುಳಿದ ವರ್ಗಗಳಿಗೆ ಅತ್ಯಂತ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ವೇದಿಕೆಯ ಪ್ರಮುಖ ಪದಾಧಿಕಾರಿಗಳು ಖರ್ಗೆಯವರ ಬಳಿ ನಿವೇದಿಸಿಕೊಂಡರು.
ಈ ಸಂದರ್ಭದಲ್ಲಿ ತಮ್ಮ ವೇದಿಕೆಯ ಪ್ರಮುಖ ಬೇಡಿಕೆಗಳ ಮನವಿ ಪತ್ರ ನೀಡಿ ಚರ್ಚಿಸಲಾಯಿತು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆ ಗೊಳಿಸಬಾರದು. ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸುಮಾರು 70 ಜಾತಿ-ಉಪಜಾತಿಗಳನ್ನು ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಮಾಜದ ಅಲಕ್ಷಿತ ಅತಿ ಹಿಂದುಳಿದ ಸಮುದಾಯಗಳ ಸಾಮಾಜಿಕ ಸುಧಾರಣೆಗೆ ಸರ್ಕಾರ ಬದ್ಧವಾಗಬೇಕು ಎನ್ನುವ ಆಗ್ರಹ ಮಂಡಿಸಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಮಾಜಿ ಪರಿಷತ್ ಶಾಸಕ, ಎಂ ಸಿ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್, ಖಜಾಂಚಿ ಎಲ್.ಎ ಮಂಜುನಾಥ್, ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆಎನ್ ಲಿಂಗಪ್ಪ, ಮಾಜಿ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ್, ಅಲೆಮಾರಿ ಸಮುದಾಯದ ರಾಜ್ಯಾಧ್ಯಕ್ಷರಾದ ಶಿವಾನಂದ ಪಾಚಂಗಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post