ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ದಲಿತರ ಮನೆಯಲ್ಲಿ ಬಲಿತರು ಬಂದು ಮಾಂಸಾಹಾರ ಸೇವಿಸುವುದು, ಪೇಜಾವರದ ಹಿರಿಯ ಯತಿಗಳು ದಲಿಕೇರಿಗೆ ಹೋಗುತ್ತಿದ್ದ ಬಗ್ಗೆ ಹೇಳಿಕೆ ನೀಡಿ ತೀವ್ರ ವಿವಾದ ಉಂಟಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರು ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಹಂಸಲೇಖ ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿದ್ದಾರೆ, ಪೇಜಾವರ ಶ್ರೀಗಳ ಬಗ್ಗೆ ಹೇಳಿಕೆ ನೀಡಿ ಅವಮಾನ ಮಾಡಿದ್ದಾರೆ ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ಇಷ್ಟು ದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದ ಸಂಗೀತ ನಿರ್ದೇಶಕರು ಇಂದು ಮಧ್ಯಾಹ್ನ ತೀವ್ರ ಭದ್ರತೆ ನಡುವೆ ಪೊಲೀಸ್ ಠಾಣೆಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಹಂಸಲೇಖ ಪರ ಮತ್ತು ವಿರೋಧಿಗಳು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಈ ಮಧ್ಯೆ ನಟ ಚೇತನ್ ಹಂಸಲೇಖ ಪರ ವಹಿಸಿ ಮಾತನಾಡಿ, ನಾನು ಕೂಡ ಪೊಲೀಸ್ ಠಾಣೆಗೆ ಬಂದು ಅವರಿಗೆ ಸಾಥ್ ಕೊಡುತ್ತೇನೆ ಎಂದಿದ್ದರು. ಅದಕ್ಕೆ ಭಜರಂಗದಳ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಭಜರಂಗದಳ ಮುಖಂಡ ತೇಜಸ್ ಮಾತನಾಡಿ, ಸಂಗೀತ ನಿರ್ದೇಶಕ ಹಂಸಲೇಖ ಅವರು ಬೇಷರತ್ ಕ್ಷಮೆಯಾಚಿಸಬೇಕು. ಈ ವಿಷಯದಲ್ಲಿ ನಟ ಚೇತನ್ ಏಕೆ ಮಧ್ಯೆ ಪ್ರವೇಶಿಸಬೇಕು, ಚೇತನ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ, ಚೇತನ್ ಈ ದೇಶದ ನಾಗರಿಕನೇ ಅಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಮಧ್ಯೆ ಬಸವನಗುಡಿ ಪೊಲೀಸ್ ಠಾಣೆ ಬಳಿ ಬಂದ ನಟ ಚೇತನ್ ಮತ್ತು ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ಹಂಸಲೇಖ ಅವರಿಗೆ ಚೇತನ್ ಸೇರಿದಂಥೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















