ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಾನು ಏಕಾಂಗಿ ಅಲ್ಲ, ಹಿಂತಿರುಗಿ ಎಂದೂ ನೋಡಲಿಲ್ಲ. ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಬ್ಬನೇ ಬಂದು ಹೋರಾಟ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟದ ಬದುಕನ್ನು ನೆನಪಿಸಿಕೊಂಡು ಭಾವುಕರಾದ ಘಟನೆ ನಡೆಯಿತು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಎರಡು ವರ್ಷದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ ಅವರು, 75 ವರ್ಷ ದಾಟಿದ ವ್ಯಕ್ತಿಗೆ ಸಂಪುಟದಲ್ಲಿ ಸ್ಥಾನ ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ತೀರ್ಮಾನ ತೆಗೆದುಕೊಂಡಿತು. ಆದರೆ ನನಗೆ ಅಧಿಕಾರ ಕೊಟ್ಟಿದ್ದಾರೆ, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಅತ್ಯಂತ ಭಾವುಕರಾಗಿ ನುಡಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೂಡ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಪ್ರಬಲವಾಗಿ ಹೋರಾಡಿ ಗೆದ್ದು ಬಂದು ಈ ದೇಶವನ್ನು ಮುನ್ನಡೆಸಿಕೊಂಡು ಹೋಗಬೇಕೆಂದು ನಾನು ಆಶಿಸುತ್ತೇನೆ ಎಂದು ಹೇಳಿದರು.

ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ ಶಿವಮೊಗ್ಗದ ಶಿಕಾರಿಪುರದಲ್ಲಿ ಬೆಳೆದು ಅಲ್ಲಿಂದ ರಾಜಕೀಯ ನಾಯಕನಾಗಿ ಹೊರಹೊಮ್ಮಿದ್ದೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ 2008ರಲ್ಲಿ ಸ್ವಂತ ಬಲದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ರಾಜ್ಯದ ಜನತೆ ನನಗೆ ಬೆಂಬಲ ನೀಡಿದ್ದಾರೆ ಎಂದು ತಮ್ಮ ಹೋರಾಟದ ದಿನಗಳನ್ನು ನೆನಪು ಮಾಡಿಕೊಂಡರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















