ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ವಯೋನಿವೃತ್ತಿ ಹೊಂದಿರುವ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯದ ಶಿವಮೊಗ್ಗ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೀರ್ ಪಾಷ ಅವರ ಸೇವಾ ಅವಧಿಯನ್ನು ಒಂದು ವರ್ಷ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಾಗರ ತಾಲೂಕಿನ ಸಿಗಂದೂರು ಸೇತುವೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಪೀರ್ ಪಾಷ ಅವರ ಸೇವಾ ಅವಧಿ ವಿಸ್ತರಿಸುವುದು ಅಗತ್ಯ ಎಂದು ಮಾ.29ರಂದು ಯಡಿಯೂರಪ್ಪ ಅವರು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಪಾಷ ಮಾ.31ರಂದೇ ಸೇವೆಯಿಂದ ನಿವೃತ್ತರಾಗಿದ್ದು, ಕಚೇರಿಯ ಕಾರ್ಯಭಾರವನ್ನೂ ಬೇರೆ ಅಧಿಕಾರಿಗೆ ವಹಿಸಿಕೊಟ್ಟಿದ್ದಾರೆ. ಆದರೆ, ಮುಖ್ಯಮಂತ್ರಿಯವರ ಟಿಪ್ಪಣಿ ಆಧರಿಸಿ ಒಂದು ವರ್ಷ ಅವರ ಸೇವಾ ಅವಧಿ ವಿಸ್ತರಿಸಲು ಹಣಕಾಸು ಇಲಾಖೆಯ ಒಪ್ಪಿಗೆ ಕೋರಿ ಲೋಕೋಪಯೋಗಿ ಇಲಾಖೆಯಿಂದ ಪ್ರಸ್ತಾವ ಸಲ್ಲಿಸಲಾಗಿದೆ. ಇದು ರಾಜ್ಯ ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಎಂದು ಹೇಳಲಾಗಿದೆ.
ಸಿಗಂದೂರಿನಲ್ಲಿ 1.8 ಕಿ.ಮೀ. ಉದ್ದದ ಸೇತುವೆ ನಿರ್ಮಿಸಲಾಗುತ್ತಿದೆ. ಕಾಮಗಾರಿಯ ಅಂದಾಜು ಪಟ್ಟಿ, ಯೋಜನಾ ವರದಿ ತಯಾರಿಸುವ ಹಂತದಿಂದಲೂ ಪೀರ್ ಪಾಷ ಅಲ್ಲಿ ಕೆಲಸ ಮಾಡಿದ್ದಾರೆ. ದೊಡ್ಡ ಕಾಮಗಾರಿ ನಿರ್ವಹಿಸಿದ ಅನುಭವಿಗಳು ಅಗತ್ಯವಿರುವ ಕಾರಣದಿಂದ ಅವರ ಸೇವಾ ಅವಧಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು ಹೇಳುತ್ತಾರೆ.
ಆದರೆ, ಪೀರ್ ಪಾಷ ತಮ್ಮ ಸೇವಾ ಅವಧಿಯ ಹೆಚ್ಚಿನ ಕಾಲವನ್ನು ಶಿವಮೊಗ್ಗ ನಗರಸಭೆಯಲ್ಲೇ ಕಳೆದಿದ್ದರು. ಮೂರು ವರ್ಷಗಳಿಂದ ಈಚೆಗೆ ರಾಷ್ಟ್ರೀಯ ಹೆದ್ದಾರಿ ವಲಯದ ಶಿವಮೊಗ್ಗ ಉಪ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post