ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯ ಮಾಡಿದ್ದಾರೆ.

ಹೆಚ್’ಡಿಕೆ ಅವರು ಮಾಡಿರುವ ಟ್ವೀಟ್ ವಿವರ ಹೀಗಿದೆ:
ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ.

ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















