ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೈಋತ್ಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ೩ ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೆ ರಾಜಧಾನಿ ಬೆಂಗಳೂರು ನಿನ್ನೆ ಸುರಿದ ಭಾರೀ ಮಳೆಗೆ ತತ್ತರಿಸಿ ಹೋಗಿದೆ.
ನಗರದಲ್ಲಿ ನಿನ್ನೆ ಸಂಜೆಯಿಂದ ಇಂದು ಬೆಳಗಿನ ಜಾವದವರೆಗೆ ಎಡೆಬಿಡದೆ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಂದ್ರಾ ಲೇಔಟ್, ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ, ಜಯಮಹಲ್ ರಸ್ತೆ ಮತ್ತು ದಕ್ಷಿಣ ಬೆಂಗಳೂರು ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಪಾರ್ಟ್ಮೆಂಟ್ಗಳ ನೆಲಮಾಳಿಗೆಗಳು ಬಹುತೇಕ ಜಲಾವೃತವಾಗಿತ್ತು.

ಪ್ರಯಾಣಿಕರ ಪರದಾಟ:
ರಾಜಕಾಲುವೆ ಒತ್ತುವರಿ, ಒಳಚರಂಡಿಗಳ ಅವ್ಯವಸ್ಥೆಯಿಂದ ರಸ್ತೆ ಮೇಲೆ ನೀರು ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ನಿಂದಾಗಿ ಸಾರ್ವಜನಿಕರು ಹಿಡಿಶಾಪಹಾಕುತ್ತಿದ್ದರು.

ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ:
ನಿನ್ನೆ ಸುರದ ಭಾರೀ ಮಳೆ ಬೆಂಗಳೂರಿನಲ್ಲಿ ಅವಾಂತರವನ್ನೇ ಸೃಷ್ಟಿ ಮಾಡಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಬಿಹಾರ, ಜಮ್ಮುಕಾಶ್ಮೀರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಅಸ್ಸಾಂನಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ರಾಜ್ಯದ ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















