ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು #Lokayuktha Police ಅಕ್ರಮ ಸಂಪಾದನೆಗಳನ್ನು ಬಯಲಿಗೆ ಎಳೆಯಲು ಮುಂದಾಗಿದ್ದಾರೆ.
ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ, ದಾಖಲೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಲ್ಲೆಲ್ಲಿ ದಾಳಿ?
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ. ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಚ್.ಬಿ. ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕೋಲಾರ: ಬೆಸ್ಕಾಂ ಎಇಇ ಜಿ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ ಎಇಇ ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್. ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.
ದಾವಣಗೆರೆ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬಾಗಲಕೋಟೆ: ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್’ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀಳಗಿ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆAಟ್ ಮಲ್ಲೇಶ್ ದುರ್ಗದ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಬಾಗಲಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ, ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿಯಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ವಿಜಯಪುರ: ಕರ್ನಾಟಕ ಗೃಹ ಮಂಡಳಿ ಎಫ್’ಡಿಎ ಶಿವಾನಂದ ಕೆಂಬಾವಿ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ ಮತ್ತು ತಿಡಗುಂದಿ ಗ್ರಾಮದ ಬಳಿಯಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಡಿ. ಮಲ್ಲೇಶ್ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ್ ಸೇರಿದಂತೆ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.
ಕಲಬುರಗಿ: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಿಡಬ್ಲ್ಯೂಡಿ ಇಲಾಖೆಯ ಸೆಕ್ರೆಟರಿ ಇನ್ ಚೀಫ್ ಜಗನ್ನಾಥ್ ಹಲಿಂಗೆ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಕಲಬುರಗಿ ನಗರದ ಓಕಳಿ ಕ್ಯಾಂಪ್ ಬಡಾವಣೆಯಲ್ಲಿರುವ ಮನೆ, ಬೆಂಗಳೂರಿನ ಕಚೇರಿ, ಧನ್ನೂರ್ (ಕೆ) ಗ್ರಾಮದಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 















