ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ಸಂಸದ ಡಿ.ವಿ. ಸದಾನಂದ ಗೌಡ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.
ಬಿಜೆಪಿ ಕಾರ್ಯಕರ್ತರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಅದ್ದೂರಿಯಾಗಿಯೇ ಸ್ವಾಗತಿಸಿದರು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅವರ ಮಾತಿನ ವರಸೆಯಲ್ಲಿ ಬೇಸರ, ಸಿಟ್ಟು, ಅಸಮಾಧಾನ ಕಾಣಲಿಲ್ಲ. ಬೆಂಗಳೂರಿಗೆ ಬಂದಿಳಿದಾಗ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಂದ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಡಿ.ವಿ. ಸದಾನಂದ ಗೌಡ, ಹಿರಿಯರ ಮಾತಿಗೆ ಬೆಲೆ ನೀಡಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇಂದು ಅಧಿಕಾರದಿಂದ ಕೆಳಗಿಳಿಯುವಾಗಲೂ ಕೂಡ ಕಾರ್ಯಕರ್ತರು, ಬೆಂಬಲಿಗರಿಂದ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸ್ವಾಗತಿಸಿ ಆಶೀರ್ವಾದ ಮಾಡಲು ಬಂದಿರುವುದು ನೋಡಿದಾಗ ನನಗೆ ಸಂತಸವಾಗುತ್ತಿದೆ. ಅವರ ಪ್ರೀತಿ, ವಿಶ್ವಾಸ ಗಳಿಸಿಕೊಂಡು ಮುಂದೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















