ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ. ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಎಂ.ಎ. ಹೆಗಡೆ ಅವರು ಕೊರೋನಾ ಸೋಂಕಿನಿಂದ ನಿಧನರಾಗಿದ್ದು ದುರಾದೃಷ್ಟಕರ. ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದರು, ಅವರು ರೂಪಿಸಿದ್ದ ಮಾತಿನ ಮಂಟಪ ಕಾರ್ಯಕ್ರಮ ಅತ್ಯಂತ ಜನಪ್ರಿಯವಾಗಿತ್ತು, ಅವರ ಅಕಾಲಿಕ ನಿಧನದಿಂದ ನಿಜಕ್ಕೂ ಸಾಂಸ್ಕೃತಿಕ ಲೋಕ ಒಂದು ದಿಗ್ಗಜ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ ಅವರು, ಸಂಸ್ಕೃತದಲ್ಲಿಯೂ ಅಪಾರ ಪಾಂಡಿತ್ಯ ಹೊಂದಿದ್ದ ಅವರು ಆನಂತರ ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದರು. ಹೆಗಡೆ ಅವರು ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದರು ಎಂದು ತಿಳಿಸಿದ್ದಾರೆ.
ಸ್ವತಃ ಪಾತ್ರಧಾರಿಯು ಆಗಿದ್ದ ಹೆಗಡೆಯವರು 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದವು ಅವರ ಜನಪ್ರಿಯ ಪ್ರಸಂಗಗಳು. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ರಚಿಸಿದ್ದಾರೆ ಎಂದಿದ್ದಾರೆ.
ಅತ್ಯಂತ ಪ್ರಚಾರ ಚಿಂತನೆಯ ವಿದ್ವಾಂಸರಾಗಿದ್ದ ಎಂ ಎ ಹೆಗಡೆ ತಮ್ಮ ಚಿಂತನೆಯನ್ನು ನಿಷ್ಠುರವಾಗಿ ಪ್ರತಿಪಾದಿಸುತ್ತಿದ್ದರು. ಸರಳ ಹಾಗೂ ನೇರ ನಡವಳಿಕೆಗೆ ಹೆಸರಾಗಿದ್ದರು. ಅವರ ನಿಧನ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ನಷ್ಟ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















