ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಲೆನಾಡಿನಲ್ಲಿ ಮಳೆಗಾಲ ಶುರುವಾಯಿತೆಂದರೆ ವಿದ್ಯಾರ್ಥಿಗಳು ಎದುರಿಸುವ ಸಮಸ್ಯೆಗಳು ಒಂದೆರಡಲ್ಲ. ಈ ವರ್ಷವೂ ಕಳೆದ ಶೈಕ್ಷಣಿಕ ಸಾಲಿನಂತೆ ಹೊಸ ಹೊಸ ಸಮಸ್ಯೆಗಳು ನಾಡಿನ ಮಕ್ಕಳಿಗೆ ಎದುರಾಗುತ್ತಿವೆ. ಅದರಲ್ಲೂ ಮಲೆನಾಡು ಪ್ರದೇಶದ ಗ್ರಾಮೀಣ ಭಾಗದ ಮಕ್ಕಳು ಮತ್ತೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ಆಗಾಗ ಕಡಿತವಾಗುವ ವಿದ್ಯುತ್ ಸಂಪರ್ಕದ ಸಮಸ್ಯೆಯೊಂದಿಗೆ ಈಗ ಮೊಬೈಲ್ ನೆಟ್ವರ್ಕ್ ಕೂಡ ಸರಿಯಾಗಿ ಸಿಗದೇ ಮತ್ತೊಂದು ಹೊಸ ಸಮಸ್ಯೆ ಶುರುವಾಗಿದೆ. ಹೀಗಾಗಿ ಮಲೆನಾಡಿನ ಮಕ್ಕಳು ಮಳೆಯಲ್ಲಿಯೇ ಬೆಟ್ಟಗಳ ತುದಿಗೆ ಹೋಗಿ ಆನ್ಲೈನ್ ಪಾಠಗಳನ್ನು ಕಲಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ನೆಟ್-ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್-ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಬಂದಿವೆ. ಹೀಗಾಗಿ ಈ ನೆಟ್ವರ್ಕ್ ಸಮಸ್ಯೆಗೆ ಕೊನೆ ಹಾಡಲು ನೆಟ್ವರ್ಕ್ ಆಪರೇಟರ್ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಹೊಸ ಸಮಸ್ಯೆಯನ್ನು ವಿವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post