ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ #Minister H D Kumaraswamy ಅವರು ಹೇಳಿದರು.
ಈ ಕುರಿತಂತೆ ಮಾತನಾಡಿದ ಅವರು, ಜೆಡಿಎಸ್ ಮುಗಿಸಬೇಕು ಎಂದು 12 ಜನ ಶಾಸಕರನ್ನು ಕರೆದುಕೊಂಡು ಬನ್ನಿ, 13 ಜನರನ್ನು ಕರೆದುಕೊಂಡು ಬನ್ನಿ ಎನ್ನುವ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲವೂ ನನಗೆ ಗೊತ್ತಿದೆ. ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ ನವರು ಏನೇನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಕಾಂಗ್ರೆಸ್ಸಿನವರ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದರು ಅವರು.
ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕ್ರಾಂತಿ, ವಾಂತಿ ಬಗ್ಗೆ ನಾನು ಹೇಳೊದಿಲ್ಲ. ಎಲ್ಲವನ್ನು ಈಗಾಗಲೇ ನೋಡಿ ಆಗಿದೆ. ನಾನು ಇದ್ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ ಎಂದರು.
Also read: ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ, ನಿಖಿಲ್ ಹೆಸರು ಪ್ರಸ್ತಾಪ | ಕುಮಾರಸ್ವಾಮಿ ಹೇಳಿದ್ದೇನು?
ನಾನು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡುವುದು ಇಷ್ಟೇ.. ನಿಮ್ಮೆಲ್ಲರಿಗೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ನಿಮ್ಮ ಪಕ್ಷದ ಸರಕಾರ ಹೋಗುತ್ತಿರುವ ಮಾರ್ಗ ಏನು? ಜನರಿಗೆ ನೀವೆಲ್ಲಾ ಏನು ಮಾತು ಕೊಟ್ಟು ಬಂದಿದ್ದೀರಿ? ಆ ಬಗ್ಗೆ ಯೋಚನೆ ಮಾಡಿ ಎಂದು ಹೇಳಿದರು ಕುಮಾರಸ್ವಾಮಿ ಅವರು.
ನಿಮ್ಮ ಗ್ಯಾರಂಟಿಗಳು ಹಳ್ಳ ಹಿಡಿದು ಹೋಗಿವೆ. ಗ್ಯಾರಂಟಿ ಕೊಡುವುದಕ್ಕೆ ಪೈಪೋಟಿ ನಡೆಯುತ್ತಿದೆ. ಇಂತಹ ಗ್ಯಾರಂಟಿ ಕೊಟ್ಟಿದ್ದ ಹಿಮಾಚಲ ಪ್ರದೇಶ ಇವತ್ತು ಏನಾಗಿದೆ? ಕಾಂಗ್ರೆಸ್ ಶಾಸಕರು, ಮಂತ್ರಿಗಳು ನಿಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಿ, ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂದು ಗಮನಿಸಿ. ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನೋಡಿ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ನಮ್ಮ ಶಾಸಕರ ಬಗ್ಗೆ ನಮಗೆ ಆತಂಕ ಇಲ್ಲ. ಕಾಂಗ್ರೆಸ್ ಏನೆಲ್ಲಾ ಮಾಡುತ್ತಿದೆ ಎಂದು ನಮ್ಮ ಶಾಸಕರು ನನಗೆ ಹೇಳುತ್ತಿದ್ದಾರೆ. ನಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳುವುದು ಹೇಗೆ ಎನ್ನುವುದು ಗೊತ್ತಿದೆ. ಜೆಡಿಎಸ್ ಪಕ್ಷವನ್ನು ಯಾವುದೇ ಶಾಕು.. ವೀಕು ಮಾಡಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















