ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಫ್ಲೋಟೀಂಗ್ ಸೋಲಾರ್ ಪ್ಯಾನೆಲ್ ಅಳವಡಿಸುವ ಸಾಧ್ಯಾ ಸಾಧ್ಯತೆಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು #Minister Bose Raju ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ವಿಸ್ತ್ರುತ ಸಭೆ ನಡೆಸಿ ಸೂಚನೆ ನೀಡಿದರು.
ನಮ್ಮ ಇಲಾಖೆ ವ್ಯಾಪ್ತಿಯಲ್ಲಿರುವಂತಹ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುತ್ತಿರುವ 100 ಕ್ಕೂ ಹೆಚ್ಚು ಏಕರೆ ವಿಸ್ತೀರ್ಣ ಹೊಂದಿರುವ 40 ಕೆರೆಗಳನ್ನು ಗುರುತಿಸಲಾಗಿದೆ. ಈ ಕೆರೆಗಳು ಸುಮಾರು 10 ಸಾವಿರ ಏಕರೆ ಪ್ರದೇಶ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 2500 ಮೆಗಾವ್ಯಾಟ್ ಉತ್ಪಾದನೆಗೆ ಅವಕಾಶವಿದೆ. ಈ ಕೆರೆಗಳಲ್ಲಿ ವರ್ಷದಾದ್ಯಂತ ಶೇಕಡಾ 50 ರಿಂದ 60 ರಷ್ಟು ನೀರು ತುಂಬಿಸಲಾಗುತ್ತದೆ. ಈ ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಯೋಜನೆಯನ್ನು ಅಳವಡಿಸುವ ಮೂಲಕ ನೀರಾವರಿ ಇಲಾಖೆಯ ಮೂಲಕ ಏತ ನೀರಾವರಿ ಯೋಜನೆಗಳಿಗೆ ಭರಿಸಲಾಗುತ್ತಿರುವ ವಿದ್ಯುತ್ ಖರ್ಚನ್ನು ಕಡಿತಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಸಚಿವರು ವಿವರಿಸಿದರು.
Also read: ದೇಶದ ಅತ್ಯಂತ ಹಳೆಯ ಧಾನ್ಯ ಸಂಗ್ರಹ ಕೇಂದ್ರಕ್ಕೆ ಸಚಿವ ಪ್ರಲ್ಹಾದ ಜೋಶಿ ಭೇಟಿ | ಎಲ್ಲಿದೆ ಇದು?
ದೇಶದ ವಿವಿಧ ಭಾಗಗಳಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಯ ಮೂಲಕ ಕೇವಲ 1 ಗಿಗಾ ವ್ಯಾಟ್ ನಷ್ಟು ವಿದ್ಯುತ್ ಉತ್ಪಾದಿಸಲಾಗುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ತೇಲುವ ವಿದ್ಯುತ್ ಫಲಕಗಳ ಅಳವಡಿಕೆಗೆ ವಿಫುಲ ಅವಕಾಶಗಳೀವೆ. ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಗೆ ಜಮೀನಿನ ಅವಶ್ಯಕತೆ ಇಲ್ಲ ಹಾಗೂ ಸೌರ ವಿದ್ಯುತ್ ಉತ್ಪಾದನೆಗೆ ಇದು ಉತ್ತಮ ವಿಧಾನವಾಗಿದೆ. ಆದರೆ, ಇದರ ಅಳವಡಿಕೆ ವೆಚ್ಚ ಸ್ವಲ್ಪ ಹೆಚ್ಚಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ನಮ್ಮ ಕೆರೆಗಳಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ವಿಸ್ತ್ರುತವಾಗಿ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ವಿಷಯ ತಜ್ಞರೊಂದಿಗೆ ಚರ್ಚಿಸುವ ಮೂಲಕ ಅಂತಿಮ ನಿರ್ಧಾರ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ತಜ್ಞರೊಂದಿಗೆ ಸಭೆ ಆಯೋಜಿಸುವಂತೆ ಕೆಆರ್ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರಾದ ಎನ್ ಎಸ್ ಭೋಸರಾಜು ನಿರ್ದೇಶಿಸಿದರು.
ಸಭೆಯಲ್ಲಿ ಸಣ್ಣನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರುದ್ರಪ್ಪಯ್ಯ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಕುಲಕರ್ಣಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post