ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ. ವೆಂಕಟಸುಬ್ಬಯ್ಯ ಅವರು ಇಂದು ಬೆಳಿಗ್ಗೆ ತಮ್ಮ ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ.
108ನೆಯ ವಯಸ್ಸಿನ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂಎ ಪದವಿ, ನಂತರ ಬಿಟಿ ಪದವಿ ಗಳಿಸಿದ್ದರು. ಹಾಗೂ ಮಹಾರಾಜ ಕಾಲೇಜಿನಲ್ಲಿಯೇ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು.
ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ವೆಂಕಟಸುಬ್ಬಯ್ಯ ಅವರಿಗೆ ಸಲ್ಲುತ್ತದೆ.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಅವರು, ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿದ್ದಲ್ಲದೆ, 50 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿದ್ದಾರೆ. ಇಗೋ ಕನ್ನಡ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಅವರ ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದ, ಜಿ.ವಿ. ಎಂದೇ ಖ್ಯಾತರಾದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವಿದ್ವಾಂಸರು ಇಂದು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post