ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ವತಿಯಿಂದ ಡಿ.೨೯ರಂದು ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.

ಗಾಂಧಿ ಶಾಂತಿ ಪ್ರತಿಷ್ಠಾನ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಉದಯ ಪ್ರಕಾಶನ ಸಹಯೋಗದಲ್ಲಿ ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹಿರಿಯ ಸಾಹಿತಿ ಡಾ.ಹೆಚ್.ಎಸ್. ವೆಂಕಟೇಶಮೂರ್ತಿ ಕೃತಿ ಲೋಕಾರ್ಪಣೆ ಮಾಡುವರು. ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ.ಪಿ. ಕೃಷ್ಣ ಅಧ್ಯಕ್ಷತೆ ವಹಿಸುವರು.

ಸಮಾರಂಭದಲ್ಲಿ ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡರವರು ಗ್ರಂಥದ ಕುರಿತು ಮಾತನಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಹಾಗೂ ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಭಾಗವಹಿಸುವರು.

ಶ್ರೀರಾಮಾಯಣ ದರ್ಶನಂ ಕಾವ್ಯ ವಾಚನವನ್ನು ವಿದ್ವಾನ್ ಖಾಸಿಂ ಮಲ್ಲಿಗೆಮಡುವುರವರು ನಡೆಸಿಕೊಡುವರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್. ಸತೀಶ್ ಉಪಸ್ಥಿತರಿರುವರು ಎಂದು ಆಯೋಜಕರಾದ ಸುರೇಶ್ ಬಿ.ಕೆ. ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















