ಕಲ್ಪ ಮೀಡಿಯಾ ಹೌಸ್
ಬೆಳಗಾವಿ: ಸಹಕಾರಿ ನಾಯಕ ಡಾ. ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದ್ದು, ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಸಂಜೆ ಪಕ್ಷ ಸೇರಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಕ್ಷಕ್ಕೆ ಮಂಜುನಾಥ ಗೌಡ ಅವರಿಗೆ ಸ್ವಾಗತ. ಆದರೆ ಪಕ್ಷದ ಸಿದ್ದಾಂತಕ್ಕೆ ಅವರು ಬದ್ಧರಾಗಬೇಕು. ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾರ್ಗದರ್ಶನ ಮಾಡಬೇಕು. ಈ ಅಂಶಗಳನ್ನು ಅವರಿಗೆ ತಿಳಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಕೆಪಿಸಿಸಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಕಾಂಗ್ರೆಸ್ ಕಚೇರಿ ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥ ಗೌಡ ತಮ್ಮ ಕೆಲ ಬೆಂಬಲಿಗರೊಂದಿಗೆ ಏ 7ರ ಸಂಜೆ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಕೆ.ಪಿ.ದುಗ್ಗಪ್ಪ ಗೌಡ , ಶಿಮುಲ್ ಮಾಜಿ ಅಧ್ಯಕ್ಷ ಜಗದೀಶ್ವರ್ ಹೊಸನಗರ ತಾಲೂಕು ಸಹಕಾರ ಮುಖಂಡರಾದ ಸುರೇಶ್ ವಾಟಗೋಡು , ಉಮೇಶ್ ಹಾಲಗದ್ದೆ ಮುಂತಾದವರು ಸೇರ್ಪಡೆಯಾಗಲಿದ್ದಾರೆ. ಅಲ್ಲಿಂದ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಎರಡು ದಿನಗಳ ಹಿಂದಷ್ಟೇ ಆರ್.ಎಂ.ಮಂಜುನಾಥ ಗೌಡ ಅಭಿಮಾನಿಗಳ ಸಭೆ ನಡೆಸಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಇದೀಗ ಕೆಲ ಬೆಂಬಲಿಗರೊಂದಿಗೆ ಅವರು ಕಾಂಗ್ರೆಸ್ನತ್ತ ಹೆಜ್ಜೆ ಹಾಕಿದ್ದಾರೆ ಎಂದು ಹೇಳಲಾಗಿದೆ.
ಕರೊನಾ ಕಾರಣದಿಂದ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ನನ್ನ ಬೆಂಬಲಿಗರು ಹಂತ ಹಂತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಲಾಗುವುದು ಎಂದು ಮಂಜುನಾಥ ಗೌಡ ತಿಳಿಸಿದ್ದಾರೆ.
ಶಿವಮೊಗ್ಗ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ತೀರ್ಥಹಳ್ಳಿ ಜೆಡಿಎಸ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಹಲವರು ಈ ವೇಳೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಕೊಂಚ ದ್ವಂದ್ವ ಸೃಷ್ಟಿ ಅಗಿದ್ದು, ಮುಂಬರುವ ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಸ್ಥಳೀಯ ಚುನಾವಣೆಗಳಲ್ಲಿ ಈ ಬೆಳವಣಿಗೆ ಭಾರೀ ರಾಜಕೀಯ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post