ಕಲ್ಪ ಮೀಡಿಯಾ ಹೌಸ್ | ಬೆಳಗಾವಿ/ಖಾನಾಪುರ |
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಉಭಯ ಪ್ರದೇಶಗಳಲ್ಲಿ ವಿವಿಧ ರೈಲ್ವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಜೊತೆಯಲ್ಲಿ ರೈಲಿಗೆ ಹಸಿರು ನಿಶಾನೆ ತೋರಿಸಿದರು.
ಬೆಳಗಾವಿ ಹಾಗೂ ಖಾನಾಪುರದಲ್ಲಿ ಎರಡು ಪ್ರಮುಖ ರಸ್ತೆ, ಕೆಳ ಸೇತುವೆಗಳು ಹಾಗೂ ಖಾನಾಪುರದಲ್ಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.
ಎಲ್ಲೆಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ?
ಅಂಗೋಲ್ ಗೇಟ್ (4ನೇ ಗೇಟ್) ನಲ್ಲಿರುವ ಎಲ್’ಸಿ 380 ರಲ್ಲಿ, ರೂ. 26.05 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ. ಹಾಗೆಯೇ, ಖಾನಾಪುರ ಸ್ಟೇಷನ್ ಯಾರ್ಡ್’ನಲ್ಲಿರುವ ಎಲ್’ಸಿ 360 ರಲ್ಲಿ ರೂ. 11 ಕೋಟಿ ವೆಚ್ಚದಲ್ಲಿ ಮತ್ತೊಂದು ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ.


ಶಂಕುಸ್ಥಾಪನೆ ನಂತರ ಮಾತನಾಡಿದ ಸಚಿವರು, ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಲು ಸೂಚನೆ ನೀಡಿದರು.
ಇನ್ನು, ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್, ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಮೇಯರ್ ಮಂಗೇಶ್ ಪವಾರ್, ಹುಬ್ಬಳ್ಳಿ ಡಿಆರ್’ಎಂ ಬೇಲಾ ಮೀನಾ, ಕನ್ಸ್ಟ್ರಕ್ಷನ್ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ, ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ಎಸ್.ಪಿ. ಶಾಸ್ತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಖಾನಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಶಾಸಕರಾದ ವಿಠಲ್ ಸೋಮಣ್ಣ ಹಾಲಗೇಕರ್, ಹುಬ್ಬಳ್ಳಿ ಡಿಆರ್’ಎಂ ಬೇಲಾ ಮೀನಾ, ಕನ್ಸ್ಟ್ರಕ್ಷನ್ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ, ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ಎಸ್.ಪಿ. ಶಾಸ್ತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post