ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರೈತರ ಪಂಪ್ ಸೆಟ್ಗಳಿಗೆ ಪ್ರಸ್ತುತ ನೀಡುತ್ತಿರುವ 7 ಗಂಟೆಗಳ ತ್ರೀ ಫೇಸ್ ವಿದ್ಯುತ್ ಸಮಯವನ್ನು ಹೆಚ್ಚಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಬಜೆಟ್ ಅದಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ 70 ಪ್ರತಿಶತಕ್ಕಿಂತ ಹೆಚ್ಚಿನ ರೈತರ ಪಂಪ್ಸೆಟ್ಗಳಿಗೆ 7 ಗಂಟೆಗಳು ನೀಡಲಾಗುವ ಕರೆಂಟ್ನಲ್ಲಿ ದಿನಕ್ಕೆ ಏಳು ಸಾರಿ ತೆಗೆಯಲಾಗುತ್ತಿದೆ. ರಾಜ್ಯದಲ್ಲಿ ಕರೆಂಟ್ ಉತ್ಪಾದನೆ ಹೆಚ್ಚಾಗಿದ್ದರೂ, ಖರೀದಿ ಮಾಡುವವರಿಲ್ಲ. ಆದರೂ ರೈತರಿಗೆ ಹೆಚ್ಚಿನ ಸಮಯ ಕರೆಂಟ್ ಕೊಡುತ್ತಿಲ್ಲ ಎಂದು ಆರೋಪಿಸಿದರು.
ಮೊದಲು ಹೆಚ್ಚು ಹಣ ನೀಡಿ ಕರೆಂಟ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ಕಡಿಮೆ ದರದಲ್ಲಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಆದ್ದರಿಂದ ಪ್ರಸ್ತುತ ನೀಡುತ್ತಿರುವ ಏಳು ತಾಸು ವಿದ್ಯುತ್ ಸಮಯವನ್ನು ಹೆಚ್ಚಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶಂಪುರ್ ಮನವಿ ಮಾಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಶಾಸಕ ಬಂಡೆಪ್ಪ ಖಾಶೆಂಪುರ್ ಅವರ ಸಲಹೆಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸುವ ಭರವಸೆ ನೀಡಿದರು.
ಇದು ಗಂಭೀರವಾದ ವಿಷಯವಾಗಿದೆ. ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕು. ಚರ್ಚೆಗೆ ಅವಕಾಶ ಕೊಡಿ ಎಂದು ಅನೇಕ ಶಾಸಕರು ಬಂಡೆಪ್ಪ ಖಾಶೆಂಪುರ್ ಅವರ ಮನವಿಗೆ ಧ್ವನಿಗೂಡಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಅದಿವೇಶನದಲ್ಲಿ ಅರ್ಧ ಗಂಟೆ ಸಮಯ ನೀಡುತ್ತೇನೆಂದು ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿಯವರು ಶಾಸಕರಿಗೆ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post