ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮನಕಲಕುವ ಘಟನೆ ನಡೆದಿದೆ. ವಾಜರಹಳ್ಳಿಯ ಬಿಸಿಸಿಎಚ್ಎಸ್ ಲೇಔಟ್ನ ಮನೆಯೊಂದರಲ್ಲಿ 4 ತಿಂಗಳ ಅವಳಿ ಹೆಣ್ಣುಮಕ್ಕಳನ್ನು ನೀರು ತುಂಬಿದ್ದ ಬಕೆಟ್ನಲ್ಲಿ ಮುಳುಗಿಸಿ ಕೊಲೆ (Murder) ಮಾಡಿದ ಆರೋಪ ತಾಯಿಯ ಮೇಲಿದೆ. ಬಳಿಕ ಆಕೆಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.
ಈ ಕೃತ್ಯ ಎಸಗಿದ ಮಹಿಳೆಯನ್ನು ಉಮಾದೇವಿ (44) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅವರ ಪತಿ ರಾಮಲಿಂಗಪ್ಪ ನೀಡಿದ ದೂರಿನ ಆಧಾರದ ಮೇಲೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಐವಿಎಫ್ ಚಿಕಿತ್ಸೆಯ ಬಳಿಕ ಅವಳಿ ಹೆಣ್ಣುಮಕ್ಕಳ ಜನನ
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಮಲಿಂಗಪ್ಪ ಮತ್ತು ಉಮಾದೇವಿ ಅವರು 2002ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿ ದಂಪತಿ ಕೃತಕ ಗರ್ಭಧಾರಣೆ (ಐವಿಎಫ್) ಚಿಕಿತ್ಸೆಗೆ ಒಳಗಾಗಿದ್ದರು.
ಚಿಕಿತ್ಸೆ ಫಲ ನೀಡಿದ್ದು, ಕಳೆದ ಮೇ 5ರಂದು ಉಮಾದೇವಿಯವರಿಗೆ ಅವಳಿ ಹೆಣ್ಣುಮಕ್ಕಳು ಜನಿಸಿದ್ದರು. ನಾಲ್ಕು ತಿಂಗಳ ಹಿಂದೆ ಮನೆಗೆ ಆಗಮಿಸಿದ್ದ ಪುಟ್ಟ ಕಂದಮ್ಮಗಳು ಇದೀಗ ದಾರುಣವಾಗಿ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.
Also read>> ಸಾಗರ: ನೆಲ್ಲಿಬೀಡು ಟಿಪ್ಪರ್–ಬೈಕ್ ಅಪಘಾತ: ಪುತ್ರಿಯ ಬಳಿಕ ತಂದೆಯೂ ಸಾವು
ಮಕ್ಕಳ ಪಾಲನೆಯಲ್ಲಿ ಆಸಕ್ತಿ ತೋರಿಸದೆ ವಿಚಿತ್ರವಾಗಿ ವರ್ತನೆ
ಮಕ್ಕಳು ಜನಿಸಿದ ಬಳಿಕ ಉಮಾದೇವಿ ಅವರ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು ಎಂದು ಪತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಮಕ್ಕಳ ಪಾಲನೆ ಬಗ್ಗೆ ಆಸಕ್ತಿ ತೋರುತ್ತಿರಲಿಲ್ಲ ಎನ್ನಲಾಗಿದೆ.
ಅಲ್ಲದೆ, ಮಕ್ಕಳನ್ನು ಆಶ್ರಮಕ್ಕೆ ಸೇರಿಸುವಂತೆ ಹೇಳುತ್ತಿದ್ದರು. ಅವರ ವರ್ತನೆಯಲ್ಲಿ ಅಸಹಜ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಪತಿ ರಾಮಲಿಂಗಪ್ಪ ಆತಂಕಗೊಂಡಿದ್ದರು. ಬಳಿಕ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ದು ಮನೋವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ವೈದ್ಯರ ಪ್ರಕಾರ, ಹೆರಿಗೆಯ ನಂತರ ಉಂಟಾಗುವ ಹಾರ್ಮೋನ್ಗಳಲ್ಲಿನ ಬದಲಾವಣೆ ಹಾಗೂ ಹೆರಿಗೆಯ ನಂತರದ ಖಿನ್ನತೆ (Postpartum Depression) ಕಾರಣದಿಂದ ಉಮಾದೇವಿಯವರ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು ಎನ್ನಲಾಗಿದೆ.
Bengaluru : ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ಉಮಾದೇವಿ
ಮಂಗಳವಾರ ಮಧ್ಯಾಹ್ನ ಉಮಾದೇವಿ ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದರು. ಬಹಳ ಸಮಯವಾದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆಯವರಿಗೆ ಅನುಮಾನ ಮೂಡಿದೆ. ಬಳಿಕ ಬಾಗಿಲು ತೆರೆದು ಒಳಗೆ ಪರಿಶೀಲಿಸಿದಾಗ ಕಂಡ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ.
ನಾಲ್ಕು ತಿಂಗಳ ಅವಳಿ ಹೆಣ್ಣುಮಕ್ಕಳು ನೀರು ತುಂಬಿದ್ದ ಬಕೆಟ್ನಲ್ಲಿ ಮುಳುಗಿ ಮೃತಪಟ್ಟಿರುವುದು ಪತ್ತೆಯಾಗಿದೆ. ಇದೇ ವೇಳೆ ಉಮಾದೇವಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಮನೆಯವರು ಉಮಾದೇವಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ತಲಘಟ್ಟಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅವಳಿ ಮಕ್ಕಳ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








