ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಮಹಾರಾಷ್ಟ್ರ, ರಾಜಸ್ಥಾನ್ ರಾಜ್ಯಗಳಲ್ಲಿ ಸಾವಿರಾರು ಎಕರೆ ಜಮೀನುಗಳ ಬೆಳೆನಾಶ ಮಾಡಿ ರೈತರನ್ನು ಮತ್ತು ಸಾರ್ವಜನಿಕರನ್ನು ಕಾಡುತ್ತಿರುವ ಮಿಡತೆ ಹಾವಳಿ ಪಕ್ಕದ ರಾಜ್ಯ ಆಂದ್ರಪ್ರದೇಶಕ್ಕೂ ದಾಳಿ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಎಂ.ಎಸ್) ಬಣದ ರಾಜ್ಯ ಸಮಿತಿ ಸದಸ್ಯ ನಗರಂಗೆರೆ ಶ್ರೀನಿವಾಸ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭಾರತದ ವಿವಿಧ ರಾಜ್ಯಗಳಲ್ಲಿ ಜನರನ್ನು ಕಾಡುತ್ತಿರುವ ಕೊರೋನಾ ಸಮಸ್ಯೆ ಜನಜೀವನವನ್ನು ಅಸ್ತವ್ಯಸ್ತ ಮಾಡಿದೆ. ಇದರಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೈತರಿಗೆ ಮಿಡತೆಗಳ ಹಾವಳಿಯಿಂದ ಮತ್ತೊಮ್ಮೆ ಬರಸಿಡಿಲು ಬಡಿದಂತಾಗಿದೆ. ಇದರಿಂದ ಸಾರ್ವಜನಿಕರು ಸಹ ಹೈರಾಣಾಗುವ ಸ್ಥಿತಿ ಬಂದೊದಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಮಿಡತೆಗಳ ಹಾವಳಿ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ರಾಜ್ಯದ ಗಡಿಭಾಗಗಳಾದ ಚಿತ್ರದುರ್ಗ, ತುಮಕೂರು, ರಾಯಚೂರು ಜಿಲ್ಲೆಗಳಿಗೆ ಹೊಂದಿಕೊಂಡಿರುವ ತೆಲಂಗಾಣ ಮತ್ತು ಆಂದ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ಮಿಡತೆ ಹಾವಳಿ ಶುರುವಾಗಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ತೀವ್ರ ಆತಂಕ ಎದುರಿಸುವಂತಾಗಿದೆ. ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳು ನಾಶವಾಗುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರ ವಸತಿ ಪ್ರದೇಶಗಳ ಗಿಡ, ಮರಗಳ ಮೇಲೆ ಸಹ ಹಾವಳಿ ಮಾಡುವ ಮೂಲಕ ಪರಿಸರ ನಾಶವಾಗುವುದನ್ನು ಸಹ ಅಲ್ಲಗಳೆಯುವಂತಿಲ್ಲ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಹೆಚ್ಚಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆ ವಹಿಸಬೇಕಿದೆ. ಕೃಷಿ ಇಲಾಖೆ ಸೇರಿದಂತೆ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ತಜ್ಞರು ಈ ಬಗ್ಗೆ ಹೆಚ್ಚಿನ ನಿಗಾವಹಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get in Touch With Us info@kalpa.news Whatsapp: 9481252093
Discussion about this post