ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಲೆನಾಡಿನ ಭಾಗದಲ್ಲಿರುವ ಬೃಹತ್ ಕಾರ್ಖಾನೆಗಳು ಒಂದೊಂದಾಗಿ ಮುಚ್ಚುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ತನ್ನದೇ ಆದ ಪರಂಪರೆ ಹೊಂದುವ ಜೊತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಕೊಡುಗೆ ನೀಡಿರುವ ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಳುವ ಸರ್ಕಾರಗಳು ಪುನರ್ ಪರಿಶೀಲನೆ ನಡೆಸಬೇಕಾಗಿದೆ ಎಂದು ಶಿವಮೊಗ್ಗ ಜಿಲ್ಲೆ ವೀರಶೈವ ಲಿಂಗಾಯತ ಮಠಾಧೀಶರ ಮಹಾಸಭಾ ಅಧ್ಯಕ್ಷರಾದ ಆನಂದಪುರ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ನಗರದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮಹಾಸಭಾವತಿಯಿಂದ ಬೆಂಬಲ ಸೂಚಿಸಿ ಮಾತನಾಡಿದ ಶ್ರೀಗಳು, ವಿಐಎಸ್ಎಲ್ ಈ ಭಾಗದಲ್ಲಿರುವ ಏಕೈಕ ಕಬ್ಬಿಣ ಕಾರ್ಖಾನೆಯಾಗಿದ್ದು, ಇದು ಕೇವಲ ಭದ್ರಾವತಿ ಜನರಿಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಮಲೆನಾಡಿನ ಜನರ ಬದುಕಿಗೆ ಆಧಾರವಾಗಿದೆ. ಜನರ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಮಠಾಧೀಶರ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಮಹಾಸಭಾ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದರು.

ವಿಐಎಸ್ಎಲ್ ಕಾರ್ಖಾನೆಯನ್ನು ಆಧುನೀಕರಣಗೊಳಿಸಿ ಇನ್ನೂ ಹೆಚ್ಚಿನ ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸುವ ನಿಟ್ಟಿನಲ್ಲಿ ಅಗತ್ಯವಿರುವ ಬಂಡವಾಳ ಹೂಡಬೇಕು. ಇಂದಿನ ಮಾರುಕಟ್ಟೆಗೆ ಪೈಪೋಟಿ ನೀಡುವಂತೆ ಶಕ್ತಿ ತುಂಬಬೇಕು. ಇದ್ಯಾವುದನ್ನೂ ಸಹ ಮಾಡದೆ ಲಾಭ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮೊದಲು ಅಗತ್ಯವಿರುವ ಬಂಡವಾಳ ತೊಡಗಿಸಿ ಯುವಕರಿಗೆ ಉದ್ಯೋಗ ನೀಡಿ. ಇದರಿಂದ ಭವಿಷ್ಯದಲ್ಲಿ ಎಲ್ಲಾ ರೀತಿಯ ಬೆಳವಣಿಗೆ ಕಾಣಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಾರು 20ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು.












Discussion about this post