ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ನದಿ ತುಂಬಿ ಹರಿಯುತ್ತಿದ್ದು, ಹೊಸ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಂಡಿದೆ.
ಮಧ್ಯಾಹ್ನ ಅಣೆಕಟ್ಟೆಯಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹರಿಸಲಾಗಿದ್ದು, ಪರಿಣಾಮವಾಗಿ ಭದ್ರೆ ಉಕ್ಕಿ ಹರಿಯುತ್ತಿದ್ದಾಳೆ. ರಾತ್ರಿ ವೇಳೆಗೆ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದ್ದು, ಹೊಸ ಸೇತುವೆ ಮೇಲ್ಬಾಗದಲ್ಲಿ ನೀರು ಹರಿಯುತ್ತಿದೆ.
ಸೇತುವೆ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ಭಾಗದಲ್ಲಿ ಬ್ಯಾರಿಕೇಟ್ ಅಳವಡಿಸಿ, ಸಂಚಾರ ಬಂದ್ ಮಾಡಲಾಗಿದೆ. ಎರಡೂ ಭಾಗದಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇನ್ನು, ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಮುಳುಗಡೆಯಾಗುವ ಪ್ರದೇಶದ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಕವಲಗುಂದಿಯ 30 ಕುಟುಂಬಗಳನ್ನು ಹುತ್ತಾ ಕಾಲೋನಿಯ ಒಕ್ಕಲಿಗರ ಭವನಕ್ಕೆ, ಗುಂಡೂರಾವ್ ಶೆಡ್ ಪ್ರದೇಶದ 100 ಜನರನ್ನು ವಳ್ಳುವರ್ ಕಲ್ಯಾಣ ಮಂಟಪದಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಭದ್ರಾವತಿ ಮುಳುಗಡೆಯಾಗುವ ಪ್ರದೇಶಗಳು ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ಪ್ರದೀಪ್ ಮತ್ತಿತರರು ಇದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















