ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದಲ್ಲಿ ಮನೆಗಳನ್ನು ಬಾಡಿಗೆ ಕೊಡುವ ಮುನ್ನ ಬಾಡಿಗೆದಾರರ ಪೂರ್ವಾಪರ ಮತ್ತು ದಾಖಲಾತಿಗಳನ್ನು ಪರಿಶೀಲಿಸಬೇಕು ಎಂದು ನಗರ ವೃತ್ತ ಸಿಪಿಐ ಶಾಂತಿನಾಥ್ ಸೂಚನೆ ನೀಡಿದ್ದಾರೆ.
ಹಳೇನಗರ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಬೀಟ್ ಸಮಿತಿ ಸದಸ್ಯರ ಸಭೆ ನಡೆಸಿ, ಸಾರ್ವಜನಿಕರನ್ನು ಕುರಿತು ಅವರು ಮಾತನಾಡಿದರು.
ಮನೆಗಳನ್ನು ಬಾಡಿಗೆಗೆ ಕೊಡುವ ಸಂದರ್ಭದಲ್ಲಿ, ಬಾಡಿಗೆದಾರರ ಪೂರ್ವಾಪರ ಮತ್ತು ದಾಖಲೆಗಳಾದ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್’ಗಳನ್ನು ಪರಿಶೀಲಿಸಿ ಅವರುಗಳ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಬೇಕು. ಪೊಲೀಸ್ ಠಾಣೆಯಲ್ಲಿ ಬಾಡಿಗೆದಾರರ ಪೂರ್ವಾಪರವನ್ನು ಪರಿಶೀಲಿಸಿಕೊಂಡ ನಂತರವೇ ಬಾಡಿಗೆಗೆ ನೀಡಬೇಕು. ಕಡ್ಡಾಯವಾಗಿ ಗುರುತಿನ ಚೀಟಿಗಳ ಜೆರಾಕ್ಸ್ ಪ್ರತಿಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದರು.
ಇನ್ನು, ಇಸ್ಪೀಟು ಜೂಜಾಟ, ಮಟ್ಕಾ ಮತ್ತು ಗಾಂಜಾ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಅವರು ಮಾಹಿತಿ ನೀಡಿದರು.
ತಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಣ್ಣ ಪುಟ್ಟ ಘಟನೆಗಳು ಜರುಗಿದ ಸಂದರ್ಭದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದರಿಂದ, ಸಮಸ್ಯೆಯು ಚಿಕ್ಕದಿರುವಾಗಲೇ ಬಗೆಹರಿಸಿ ದೊಡ್ಡದಾಗದಂತೆ ತಡೆಯಬಹುದಾಗಿರುತ್ತದೆ ಎಂದರು.
ಯಾವುದೇ ಕಾನೂನು ಬಾಹೀರ ಚಟುವಟಿಕೆಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ /ಪೊಲೀಸ್ ಕಂಟ್ರೋಲ್ ರೂಂ/112 ತುರ್ತು ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















