ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ವಾಗ್ವಾದ ನಡೆದು, ಪರಿಸ್ಥಿತಿ ಬಿಗುವಿನ ವಾತಾವರಣಕ್ಕೆ ತಿರುಗಿದ ಪ್ರಸಂಗ ನಡೆದಿದೆ.
ಮಂಗಳವಾರ ಈ ಘಟನೆ ನಡೆದಿದ್ದು, ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. 29(ಹಳೇ ಸರ್ವೆ ನಂ.14)ರ ಗೋಮಾಳ ಜಾಗದಲ್ಲಿ ಸ್ಮಶಾನ ನಿರ್ಮಾಣಕ್ಕೆ ಸರ್ಕಾರದಿಂದ 1 ಎಕರೆ 20 ಗುಂಟೆ ಜಮೀನು ಮಂಜೂರಾತಿಯಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಸರ್ವೆ ಕಾರ್ಯ ನಡೆಸಲು ಗ್ರಾಮಕ್ಕೆ ತೆರಳಿದ್ದಾಗ ಗೋಮಾಳ ಒತ್ತುವರಿ ಮಾಡಿರುವ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಘಟನೆ ಕುರಿತಾಗಿನ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಮಶಾನಕ್ಕೆ ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ಒಪ್ಪಂದ ರೈತರು ಗೋಮಾಳದಲ್ಲಿ ಖಾಲಿ ಜಾಗವಿದ್ದು, ಆ ಜಾಗವನ್ನು ಬಳಸಿಕೊಳ್ಳುವಂತೆ ಪಟ್ಟು ಹಿಡಿದರು.
ಒತ್ತುವರಿ ರೈತರ ಪರವಾಗಿ ಮಾಜಿ ಶಾಸಕ ಅಪ್ಪಾಜಿ ಬೆಂಬಲಕ್ಕೆ ಬಂದ ಕಾರಣ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ಕೈಮೀರುತ್ತದೆ ಎನ್ನುವ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.
ಗೋಮಾಳ ಜಾಗದ ವಿಸ್ತೀರ್ಣದ ಬಗ್ಗೆ ಸ್ಪಷ್ಟ ಮಾಹಿತಿ ಯಾರ ಬಳಿಯೂ ಇಲ್ಲ. ಪ್ರಸ್ತುತ ಗೋಮಾಳ ಜಾಗದ ಸುತ್ತಮುತ್ತ 5 ಮಂದಿ ರೈತರು ಜಮೀನು ಹೊಂದಿದೆ. ಈ ರೈತರಿಂದ ಗೋಮಾಳ ಜಾಗ ಒತ್ತುವರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ರೈತರ ಖಾತೆಯಲ್ಲಿ ದಾಖಲಾಗಿರುವ ಮಾಹಿತಿಯಂತೆ ಸರ್ವೆ ಕಾರ್ಯ ನಡೆಸಿ ಉಳಿದ ಜಾಗವನ್ನು ಸ್ಮಶಾನಕ್ಕೆ ಬಿಟ್ಟು ಕೊಡಲಿ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.
ಆದರೆ ಒತ್ತುವರಿ ಮಾಡಿರುವ ರೈತರು ಈಗಾಗಲೇ ಒತ್ತುವರಿ ಮಾಡಿರುವ ಜಾಗದಲ್ಲಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಖಾಲಿ ಇರುವ ಜಾಗವನ್ನು ಸ್ಮಶಾನಕ್ಕೆ ಬಳಿಸಿಕೊಳ್ಳುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಿವಾದ ಇನ್ನೂ ಜೀವಂತವಿದ್ದು, ಎಲ್ಲಿಗೆ ಬಂದು ನಿಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.
Get In Touch With Us info@kalpa.news Whatsapp: 9481252093
Discussion about this post