ಶಿವಮೊಗ್ಗ: ಜಿಲ್ಲೆಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.
ಅವರು ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಭದ್ರಾವತಿಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿರುತ್ತವೆ. ಮಟ್ಕಾ ನಿಯಂತ್ರಣಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ದೊರೆಯುತ್ತಿರುವ ಬಗ್ಗೆ ದೂರುಗಳಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರ ನಿಯಂತ್ರಣಕ್ಕೆ ಪೊಲೀಸ್, ನಗರ ಪಾಲಿಕೆ, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ ಜಂಟಿಯಾಗಿ ಕಾರ್ಯ ಯೋಜನೆ ರೂಪಿಸಬೇಕು. ಇಂತಹ ಜಾಲವನ್ನು ಬೇಧಿಸಿ, ಜನರಿಗೆ ಆಡಳಿತ ವ್ಯವಸ್ಥೆ ಮೇಲೆ ವಿಶ್ವಾಸ ಬರುವಂತೆ ಮಾಡಬೇಕು ಎಂದರು.
ಶಾಲಾ ಕಾಲೇಜುಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸಂಪೂರ್ಣವಾಗಿ ನಿಲ್ಲಿಸಬೇಕು. ಒಂದು ವೇಳೆ ಈ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿದ್ದರೆ ಸಂಬಂಧಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇದೇ ರೀತಿ ನಗರದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಬೇಕು. ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ತಡೆಯಲು ನಿರಂತರ ದಾಳಿ ನಡೆಸಬೇಕು ಎಂದು ಅವರು ನಗರ ಪಾಲಿಕೆ ಅಧಿಕಾರಿಗಳಿಗೆ ಹೇಳಿದರು.
ಸಕಾಲ ಯೋಜನೆ
ಸಕಾಲ ಯೋಜನೆಯಡಿ ನಿಗದಿತ ಸಮಯದ ಒಳಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡದ ಹಾಗೂ ಅರ್ಜಿಗಳನ್ನು ಸಕಾಲ ಅಡಿ ಸ್ವೀಕರಿಸದ ಇಲಾಖೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಸಕಾಲ ಅಡಿ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಆದ್ಯತೆ ನೀಡಬೇಕು. ಅಟಲ್’ಜಿ ಜನಸ್ನೇಹಿ ಕೇಂದ್ರದಲ್ಲಿ ತಾಂತ್ರಿಕ ದೋಷಗಳು ಬರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅದನ್ನು ಸರಿಪಡಿಸಬೇಕು ಎಂದವರು ಹೇಳಿದರು.
ಪ್ರತಿಯೊಂದು ಗ್ರಾಮದಲ್ಲಿ ರುದ್ರಭೂಮಿಗೆ ಸ್ಥಳವನ್ನು ಗುರುತಿಸಬೇಕು. ತಾಲೂಕಿನಲ್ಲಿ 86 ರುದ್ರಭೂಮಿಗಳಿಗೆ ನಿವೇಶನ ಗುರುತಿಸಬೇಕಾಗಿದ್ದು, ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕು. ತಾಲೂಕಿನಲ್ಲಿರುವ 401 ಅಂಗನವಾಡಿಗಳ ಪೈಕಿ 15 ಕಡೆ ಅಂಗನವಾಡಿ ಸಹಾಯಕಿಯರ ಹಾಗೂ 9 ಕಾರ್ಯಕರ್ತೆಯರ ಹುದ್ದೆ ಖಾಲಿಯಿದ್ದು, ಇದನ್ನು ತುಂಬಲು ಕ್ರಮ ಕೈಗೊಳ್ಳಿ. ತಾಲೂಕಿನಲ್ಲಿ ಎಲ್ಲಾ ಪಿಂಚಣಿದಾರರಿಗೆ ಸಕಾಲದಲ್ಲಿ ಪಿಂಚಣಿ ವಿತರಣೆಯಾಗಬೇಕು. ಕೆಲವು ಕಡೆ ತಾಂತ್ರಿಕ ಕಾರಣಗಳಿಂದ ಸರಿಯಾಗಿ ಪಿಂಚಣಿ ವಿತರಣೆಯಾಗುತ್ತಿಲ್ಲ ಎಂಬ ದೂರುಗಳಿದ್ದು, ಪ್ರಕರಣವಾರು ಮಾಹಿತಿಯನ್ನು ಪಡೆಯಬೇಕು ಎಂದು ಹೇಳಿದರು.
ಉಪವಿಭಾಗಾಧಿಕಾರಿ ಪ್ರಕಾಶ್, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Discussion about this post