ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ನದಿ ತೀರದ ತಗ್ಗು ಪ್ರದೇಶದಲ್ಲಿನ ಸುಮಾರು 100ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.
ನಗರಸಭೆ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ನೀರಿನ ಮಟ್ಟ ಏರಿಕೆಯಾದ ಹಿನ್ನಲೆಯಲ್ಲಿ ಸೋಮವಾರ ಮಧ್ಯ ರಾತ್ರಿಯಿಂದಲೇ ತಗ್ಗು ಪ್ರದೇಶದಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.
ಗುಂಡೂರಾವ್ ಶೆಡ್ನಲ್ಲಿ ಸುಮಾರು 10, ಎಕಿನ್ಸಾ ಕಾಲೋನಿಯಲ್ಲಿ ಸುಮಾರು 25, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ನಗರದಲ್ಲಿ ಸುಮಾರು 35 ಹಾಗೂ ಕವಲಗುಂದಿ ಎ.ಕೆ ಕಾಲೋನಿಯಲ್ಲಿ ಸುಮಾರು 32 ಮನೆಗಳು ಸೇರಿದಂತೆ ಒಟ್ಟು ಸುಮಾರು ೧೦೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.
ಪ್ರಸ್ತುತ 2 ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಗರಸಭೆ ವ್ಯಾಪ್ತಿಯ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟಪ ಮತ್ತು ಕವಲಗುಂದಿಯಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಸಂತ್ರಸ್ತರಿಗೆ ಆಶ್ರಯ ನೀಡಲಾಗಿದೆ. ಅಗತ್ಯಬಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ.
ವಯೋವೃದ್ಧರು, ಮಹಿಳೆಯರು, ಮಕ್ಕಳು, ನವಜಾತ ಶಿಶುವಿನೊಂದಿಗೆ ಬಾಣಂತಿ ಮಹಿಳೆ ಸೇರಿದಂತೆ ಸುಮಾರು150ಕ್ಕೂ ಹೆಚ್ಚು ಮಂದಿ ತಾತ್ಕಾಲಿಕ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.
ಪ್ರವಾಹದಿಂದ ಹೊಸಸೇತುವೆ ಮುಳುಗಡೆಯಾಗಿದ್ದು, ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುವಂತಾಗಿದೆ. ಬಿ.ಎಚ್ ರಸ್ತೆ ಹಾಗು ಸಿ.ಎನ್ ರಸ್ತೆ ಗಳಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post