ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬೊಮ್ಮನಕಟ್ಟೆ ಸರ್.ಎಂ.ವಿ. ವಿಜ್ಞಾನ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೊರೋನಾ ಕಾರಣದಿಂದಾಗಿ ಈ ವರ್ಷದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನಷ್ಟವಾಗಿದೆ. ಈಗ ರಾಜ್ಯದಾದ್ಯಂತ ಕಾಲೇಜು ತೆರೆದಿದ್ದರೂ, ವಿದ್ಯಾರ್ಥಿಗಳು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಕಾಲೇಜಿಗೆ ಬಂದು ಹೋಗಲು ಸರಿಯಾದ ಬಸ್ ವ್ಯವಸ್ಥೆಯಿಲ್ಲದೇ ಪರದಾಡುವಂತಾಗಿದೆ ಎಂದು ದೂರಿದ್ದಾರೆ.ಇನ್ನು, ಕಾಲೇಜಿಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದರೂ ಸಹ ಕೆಲವು ವಿಷಯಗಳಿಗೆ ಉಪನ್ಯಾಸಕರಿಲ್ಲದೇ ಪಾಠವಾಗುತ್ತಿಲ್ಲ. ಹಾಸ್ಟೆಲ್’ಗಳಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದ್ದು, ಕೋವಿಡ್ ಸಂಕಷ್ಟ ಕಾಲವಾದ ಇಂದಿನ ಪರಿಸ್ಥಿತಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಕಾಲೇಜಿಗೆ ಮತ್ತು ಹಾಸ್ಟೆಲ್’ಗಳಿಗೆ ವಿದ್ಯಾರ್ಥಿಗಳು ಸಂಚರಿಸಲು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ, ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ವಿಜಯ್ ಗೌಡರ್, ಹಾಲಸ್ವಾಮಿ, ನಿರಂಜನ್, ಕುಮಾರಸ್ವಾಮಿ, ಅಕಾಶ್, ಅಖಿಲೇಶ್, ಮುರುಗೇಶ್, ಅಭಿಷೇಕ್ ಸೇರಿದಂತೆ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post