ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕೆಲ ಕಿಡಿಗೇಡಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರರವರ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ ತೋರಿರುವ ಹಿನ್ನೆಲೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಪ್ರಮುಖರು. ರಾಜ್ಯ ಹಾಗು ಜಿಲ್ಲೆಗೆ ಬಿ.ಎಸ್. ಯಡಿಯೂರಪ್ಪನವರ B S Yadiyurappa ಕೊಡುಗೆ ಅಪಾರವಾಗಿದ್ದು, ಸಂಸದ ಬಿ.ವೈ ರಾಘವೇಂದ್ರರವರು B Y Raghavendra ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಕ್ಷೇತ್ರದ ವಿಐಎಸ್ಎಲ್ ಮತ್ತು ಎಂಪಿಎಂ ಎರಡು ಕೈಗಾರಿಕೆಗಳ ಇಂದಿನ ಸ್ಥಿತಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ದುರಾಡಳಿತ ಕಾರಣವಾಗಿದೆ. ಬಿಜೆಪಿ ಪಕ್ಷ ಎಂದಿಗೂ ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ಎರಡು ಕಾರ್ಖಾನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಕಾರ್ಮಿಕರ ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿವೆ. ಭವಿಷ್ಯದಲ್ಲಿ ಈ ಎರಡು ಪಕ್ಷಗಳು ಕ್ಷೇತ್ರದಲ್ಲಿ ನೆಲೆ ಕಳೆದುಕೊಳ್ಳಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿಡಿಗೇಡಿಗಳು ನಡೆಸಿರುವ ಶವದ ಪ್ರತಿಕೃತಿಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರುಗಳದ್ದಾಗಿವೆ. ಅವುಗಳು ಕೊಳೆತು ದುರ್ವಾಸನೆ ಬರುವ ಮೊದಲು ಅವುಗಳಿಗೆ ಮುಕ್ತಿ ನೀಡುವ ಕಾರ್ಯದಲ್ಲಿ ಬಿಜೆಪಿ ತೊಡಗಿದೆ. ಈ ಬಾರಿ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳನ್ನು ಕ್ಷೇತ್ರದ ಜನರು ತಿರಸ್ಕರಿಸಲಿದ್ದಾರೆ ಎಂದರು.
Also read: ವಿಐಎಸ್ಎಲ್ ಉಳಿಸುವ ನಿಟ್ಟಿನಲ್ಲಿ ಪುನರ್ ಪರಿಶೀಲನೆ ಅತ್ಯವಶ್ಯ
ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ, ನಗರಸಭಾ ಸದಸ್ಯರಾದ ವಿ. ಕದಿರೇಶ್, ಅನುಪಮ, ಅನ್ನಪೂರ್ಣ, ಕರೀಗೌಡ, ಪ್ರಮುಖರಾದ ತೀರ್ಥಯ್ಯ, ಎಸ್. ಕುಮಾರ್, ಎಂ. ಮಂಜುನಾಥ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಚಂದ್ರಪ್ಪ, ಚನ್ನೇಶ್, ಗೋಕುಲ್ ಕೃಷ್ಣ, ಗಣೇಶ್ರಾವ್, ಚಂದ್ರು ದೇವರನರಸೀಪುರ, ನಕುಲ್, ರಾಜಶೇಖರ್, ಹೇಮಾವತಿ ವಿಶ್ವನಾಥ್, ಸುಲೋಚನ, ಅನ್ನಪೂರ್ಣ ಸಾವಂತ್, ಕವಿತಾ ರಾವ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು. ಕೊನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರತಿಕೃತಿ ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















