ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಅನ್ವಯವಾಗುವ ಕ್ಷಿಪ್ರ ಕಾರ್ಯಪಡೆ(ಆರ್’ಎಎಫ್)ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಭೂಮಿಪೂಜೆ ನೆರವೇರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ.
ಮಿಲ್ಟ್ರಿ ಕ್ಯಾಂಪ್ ಬಳಿಯಲ್ಲಿ ನಾಳೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ದತೆಗಳು ನಡೆದಿದ್ದು, ಸಂಸದ ಬಿ.ವೈ. ರಾಘವೇಂದ್ರ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಅಮಿತ್ ಶಾ ಅವರು ಹಿಂದೆ ರಾಷ್ಟ್ರಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಭದ್ರಾವತಿಗೆ ಆಗಮಿಸಿದ್ದರು. ಈಗ ಕೇಂದ್ರದ ಗೃಹ ಸಚಿವರಾಗಿ ಆಗಮಿಸುತ್ತಿದ್ದಾರೆ. ಆದರೆ, ಈ ಬಾರಿ ಬರಿಗೈಲಿ ಆಗಮಿಸದೇ ಜಿಲ್ಲೆಯೇ ಹೆಮ್ಮೆ ಪಡುವಂತಹ ಆರ್’ಎಎಫ್ ಘಟಕವನ್ನು ಕೊಡುಗೆಯನ್ನಾಗಿ ತೆಗೆದುಕೊಂಡು ಬರುತ್ತಿದ್ದಾರೆ ಎಂದರು.
ಇನ್ನು ಉಕ್ಕಿನ ನಗರಿಯ ಸಮಗ್ರ ಅಭಿವೃದ್ಧಿ ವಿಶ್ವೇಶ್ವರಯ್ಯನವರ ಕನಸಾಗಿತ್ತು. ಆರ್’ಎಎಫ್ ಆರಂಭದ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಯ ಪರ್ವ ನಾಳೆಯಿಂದ ಆರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಸ್. ರುದ್ರೇಗೌಡ, ಪ್ರಮುಖರಾದ ಎಸ್. ದತ್ತಾತ್ರಿ, ಸಿ.ಎಸ್. ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಆರ್’ಎಎಫ್ ಪಡೆಯ ಪ್ರಮುಖರು ಸೇರಿದಂತೆ ಹಲವರು ಇದ್ದರು.
ನಾಳಿನ ಕಾರ್ಯಕ್ರಮದ ಬೃಹತ್ ವೇದಿಕೆ ಹಾಗೂ ಪೆಂಡಾಲ್ ಸಿದ್ದವಾಗಿದ್ದು, ಇಡಿಯ ಪ್ರದೇಶ ನವವಧುವಿನಂತೆ ಸಿಂಗಾರಗೊಂಡಿದೆ. ಈಗಾಗಲೇ ಆಗಮಿಸಿರುವ ಆರ್’ಎಎಫ್ ಯೋಧರು ಇಲ್ಲಿನ ಬಹುತೇಕ ಸಿದ್ದತೆಗಳನ್ನು ನಡೆಸುತ್ತಿದ್ದಾರೆ ಎಂಬುದು ವಿಶೇಷ.
ಕೇಂದ್ರ ಗೃಹ ಸಚಿವರು ಉನ್ನತ ಮಟ್ಟದ ಭದ್ರತೆ ಹೊಂದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಪ್ರದೇಶದಲ್ಲಿ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ನೋಂದಣಿ ಸೇರಿದಂತೆ ಹಲವು ಕಡೆಗಳಲ್ಲಿ ನಾಕಾ ಬಂಧಿಗಳನ್ನು ಹಾಕಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post